ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಅಕ್ಟೋಬರ್ 2021
ಶಿವಮೊಗ್ಗದ ಹೊಸಮನೆ ನಿವಾಸಿಯೊಬ್ಬರನ್ನು ಕಿಡ್ನಾಪ್ ಮಾಡಿ ಆಗುಂಬೆಯ ಗೆಸ್ಟ್ ಹೌಸ್ ಒಂದರಲ್ಲಿ ಕೂಡಿ ಹಾಕಿ, ಹಣಕ್ಕೆ ಬೇಡಿಕೆ ಇಡಲಾಗಿದೆ. ಈ ವೇಳೆ ಚಿನ್ನದ ಚೈನ್, ಉಂಗುರ, ಮೊಬೈಲ್, ಇಯರ್ ಫೋನ್’ಗಳನ್ನು ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ರಘು (33) ಎಂಬುವವರನ್ನು ಕಿಡ್ನಾಪ್ ಮಾಡಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು ಆವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಏನಿದು ಪ್ರಕರಣ?
ಸರ್ಕಾರೇತರ ಸಂಸ್ಥೆ (NGO) ಒಂದರ ವಿಚಾರವಾಗಿ ಶಿವಕುಮಾರ್ ಎಂಬುವವರು ಹೊಸಮನೆಯ ರಘು ಎಂಬುವವರನ್ನು ದುರ್ಗಿಗುಡಿಯ ಕಾಂಪ್ಲೆಕ್ಸ್ ಒಂದಕ್ಕೆ ಕರೆಸಿಕೊಂಡಿದ್ದಾರೆ. ನೂತನ್ ಎಂಬಾತನ ಜೊತೆ ಸೇರಿ ಶಿವಕುಮಾರ್, ರಘು ಮೇಲೆ ಹಲ್ಲೆ ನಡೆಸಿದ್ದಾರೆ. ಜಾತಿ ನಿಂದನೆ ಮಾಡಿ ಅವಾಚ್ಯವಾಗಿ ಬೈದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಳಿಕ ಕಾರಿನಲ್ಲಿ ರಘುನನ್ನು ಆಗುಂಬೆಗೆ ಕರೆದೊಯ್ದಿದ್ದಾರೆ. ನೂತನ್’ಗೆ ಸೇರಿದ ಗೆಸ್ಟ್ ಹೌಸ್’ನಲ್ಲಿ ಚೇರ್’ಗೆ ಕಟ್ಟಿ ಹಾಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ರಘು ಕೊರಳಲ್ಲಿದ್ದ 25 ಗ್ರಾಂ ಚಿನ್ನದ ಸರ, 10 ಗ್ರಾಂ ಉಂಗುರ, ಮೊಬೈಲ್ ಫೋನ್, ಇಯರ್ ಫೋನ್’ಗಳನ್ನು ಕಿತ್ತುಕೊಂಡಿದ್ದಾರೆ. ಅಲ್ಲದೆ 50 ಲಕ್ಷ ರೂ. ಹಣ ತರಿಸುವಂತೆ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ರಘು ದೂರಿನಲ್ಲಿ ತಿಳಿಸಿದ್ದಾರೆ.
ಆಗುಂಬೆಯಿಂದ ತಪ್ಪಿಸಿಕೊಂಡು ಬಂದಿರುವ ರಘು ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಿವಕುಮಾರ್, ನೂತನ್ ಮತ್ತು ಪ್ರವೀಣ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಯುತ್ತಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200