ಶಿವಮೊಗ್ಗದ ಲೈವ್.ಕಾಂ | SHIMOGA NEWS | 30 ಡಿಸೆಂಬರ್ 2021
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹತ್ತು ವರ್ಷ ಮೂಗಿಗೆ ತುಪ್ಪ ಹಚ್ಚುವ ಕೆಲಸು ಮಾಡಿದ್ದಾರೆ ಎಂದು ಕೂಡಲ ಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಸರ್ಕಾರವು ನಮಗೆ ಪೂರಕವಾಗಿ ಸ್ಪಂದಿಸುತ್ತಿದೆ. ಆದರೆ ಕಳೆದ ಹತ್ತು ವರ್ಷದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇವಲ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾತ್ರ ಮಾಡಿದರು. ಹಾಗಾಗಿ ಹೋರಾಟ ಮಾಡಿ ನ್ಯಾಯ ಪಡೆಯುವಂತಾಗಿದೆ ಎಂದು ಆರೋಪಿಸಿದರು.
ಈಗಿನ ಮುಖ್ಯಮಂತ್ರಿ ಸ್ಪಂದಿಸುತ್ತಿದ್ದಾರೆ
ಮೀಸಲಾತಿ ಹೋರಾಟಕ್ಕೆ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಂದಿಸುತ್ತಿದ್ದಾರೆ. ನಾವಿದ್ದಲ್ಲಿಗೆ ಬಂದು ಮುಖ್ಯಮಂತ್ರಿ ಅವರು ಮೀಸಲಾತಿ ಕೊಡುವ ಭರವಸೆ ನೀಡಿದ್ದಾರೆ. ಯಾವುದೆ ಸಮಾಜಕ್ಕೆ ಅನ್ಯಾಯವಾಗದ ರೀತಿಯಲ್ಲಿ ಮೀಸಲಾತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಬಜೆಟ್’ಗಿಂತಲೂ ಮೊದಲು ಮೀಸಲಾತಿ ಘೋಷಣೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಸ್ವಾಮೀಜಿ ತಿಳಿಸಿದರು.
ವರ್ಷಾಚರಣೆ, ಜಾಗರಣೆ, ಪ್ರಶಸ್ತಿ ಪ್ರಧಾನ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮದಿಂದ ನಡೆಸಿದ ಪಾದಯಾತ್ರೆಗೆ ಒಂದು ವರ್ಷವಾಗಲಿದೆ. ಈ ಹಿನ್ನೆಲೆಯಲ್ಲಿ ಜನವರಿ 14ರಂದು ವರ್ಷಾಚರಣೆ ಮಾಡಲಾಗುತ್ತದೆ. ಆ ದಿನ ಕೂಡಲ ಸಂಗಮ ಪೀಠದಲ್ಲಿ ಜಾಗರಣೆ ನಡೆಸಲಾಗುತ್ತದೆ. ಅಲ್ಲದೆ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಮೀಸಲಾತಿಗಾಗಿ ನಾಲ್ಕನೆ ಹಂತದ ಹೋರಾಟ
ಮೀಸಲಾತಿಗಾಗಿ ಆಗ್ರಹಿಸಿ ಇದು ನಮ್ಮ ನಾಲ್ಕನೇ ಹಂತದ ಚಳವಳಿಯಾಗಿದೆ. ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ, ರಾಜ್ಯಮಟ್ಟದ ಉಪವಾಸ ಸತ್ಯಾಗ್ರಹ, ರಾಜ್ಯಾದ್ಯಂತ ರಕ್ತ ದಾಸೋಹ, ಐತಿಹಾಸಿಕ ಪಾದಯಾತ್ರೆ ಮಾಡಿದೆವು. ಇಷ್ಟೆಲ್ಲಾ ಮಾಡಿದರೂ ಕೂಡ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಕೇವಲ ಭರವಸೆ ನೀಡುತ್ತಾ ನಮ್ಮ ಬೇಡಿಕೆಯ ಈಡೇರಿಕೆಗೆ ಸಮಯವನ್ನು ತೆಗೆದುಕೊಂಡರಷ್ಟೇ ಬೇರೆನೂ ಮಾಡಲಿಲ್ಲ ಎಂದು ದೂರಿದರು.
ಕೆಳದಿ ಕರ್ನಾಟಕ ಎಂದು ಘೋಷಿಸಿ
ಕರ್ನಾಟಕ ಸರ್ಕಾರ ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಘೋಷಿಸಿದೆ. ಅದೇ ರೀತಿ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಕೆಳದಿ ಕರ್ನಾಟಕ ಎಂದು ಘೋಷಿಸಬೇಕು ಎಂದು ಸ್ವಾಮೀಜಿ ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಇ. ವಿಶ್ವಾಸ್, ಪಿ.ಒ.ಶಿವಕುಮಾರ್, ಡಾ.ಮಾಲತೇಶ್, ಪ್ರೊ. ವಿಜಯ ಕುಮಾರ್, ಜಯ ಕುಮಾರ್, ಪ್ರಕಾಶ್ ಮುಂತಾದವರಿದ್ದರು.