SHIMOGA : ಅಶ್ಲೀಲ ವಿಡಿಯೋ ಪ್ರಕರಣ ಮತ್ತು ಪೆನ್ಡ್ರೈವ್ (Pen Drive) ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ಶಿವಮೊಗ್ಗದಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಯಾರೆಲ್ಲ ಏನೇನು ಹೇಳಿದರು?
- ಶಾರದಾ ಪೂರ್ಯಾನಾಯ್ಕ್, ಶಾಸಕಿ
‘ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಎಸ್ಐಟಿ ಮೇಲೆ ನಂಬಿಕೆ ಕಡಿಮೆ ಆಗಿದೆ. ರಾಜಕೀಯ ಷಡ್ಯಂತ್ರದಿಂದ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ತಪ್ಪು ಮಾಡಿದವರನ್ನು ನಾವು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಆದರೆ ರಾಜ್ಯ ಸರ್ಕಾರ ದೊಡ್ಡ ಮಟ್ಟದ ಷಡ್ಯಂತ್ರ ಮಾಡುತ್ತಿದೆ. ಇದು ರಾಜ್ಯ ಸರ್ಕಾರದ ಘನತೆಗೆ ಅಲ್ಲ.’
- ಕೆ.ಬಿ.ಪ್ರಸನ್ನ ಕುಮಾರ್, ಮಾಜಿ ಶಾಸಕ
‘ಪೆನ್ಡ್ರೈವ್ ಕೇಸ್ಗೆ ಎಸ್ಐಟಿ ರಚಿಸಿದ್ದಾರೆ. ಆದರೆ ತನಿಖೆ ಹಿಂದೆ ರಾಜಕೀಯ ವಾಸನೆ ಬರುತ್ತಿದೆ. ಪ್ರಕರಣಕ್ಕೆ ಸಂಬಂಧ ಇಲ್ಲದವರನ್ನ ತನಿಖೆಗೆ ಒಳಪಡಿಸುತ್ತಿದ್ದಾರೆ. ಈ ಹಿನ್ನೆಲೆ ಸಿಬಿಐಗೆ ತನಿಖೆ ವಹಿಸುವಂತೆ ಆಗ್ರಹಿಸುತ್ತಿದ್ದೇವೆ. ಹೆಣ್ಮಕ್ಕಳ ಮರ್ಯಾದೆಯನ್ನು ಸರ್ಕಾರ ಮತ್ತು ಡಿ.ಕೆ.ಶಿವಕುಮಾರ್ ಅವರು ಬೀದಿಗೆ ತಂದಿದ್ದಾರೆ. ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ತೇಜೋವಧೆ ಮಾಡಲಾಗುತ್ತಿದೆ.’

ನಗರದಲ್ಲಿ ಪ್ರತಿಭಟನಾ ಮೆರವಣಿಗೆ
ಕಾರ್ಯಕರ್ತರು ನೆಹರು ರಸ್ತೆಯ ಜಿಲ್ಲಾ ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ – ಪರಿಚಿತ ಅಂತಾ ಗಾಡಿ ನಿಲ್ಲಿಸಿ ಮಾತಾಡಿದ್ದೆ ತಪ್ಪಾಯ್ತಾ? ಸಿಸಿಟಿವಿ ಚೆಕ್ ಮಾಡಿದಾಗ ಕಾದಿತ್ತು ಆಘಾತ
ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳು ಗೋಪಾಲ್, ರಾಜ್ಯ ಕಾರ್ಯದರ್ಶಿ ಶಾರದಾ ಅಪ್ಪಾಜಿಗೌಡ, ನರಸಿಂಹ ಗಂಧದಮನೆ, ನಗರ ಅಧ್ಯಕ್ಷ ದೀಪಕ್ ಸಿಂಗ್, ರಾಮಕೃಷ್ಣ ಸೇರಿದಂತೆ ಹಲವರು ಇದ್ದರು.