ಶಿವಮೊಗ್ಗ: ಬರೋಬ್ಬರಿ 12 ವರ್ಷಗಳ ನಂತರ ನಗರದ ನೆಹರು ಕ್ರೀಡಾಂಗಣದಲ್ಲಿ (Stadium) ಸ್ವಾತಂತ್ರ್ಯ ದಿನಾಚರಣೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರೀಯ ಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳುವಂತಾಗಲಿ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ
ನೆಹರು ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣವಾದ ಬಳಿಕ ರಾಷ್ಟ್ರೀಯ ಹಬ್ಬಗಳ ಆಚರಣೆಯನ್ನು ನಗರದ ಡಿಎಆರ್ ಪರೇಡ್ ಮೈದಾನಕ್ಕೆ ಬದಲಿಸಲಾಗಿತ್ತು. ಅಂದಿನಿಂದ ಈವರೆಗೂ ನೆಹರು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆಗೆ ಸಾರ್ವಜನಿಕರ ಒತ್ತಾಯ ನಿರಂತರವಾಗಿತ್ತು.

ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿಸಿ ಗುರುದತ್ತ ಹೆಗಡೆ, ನೆಹರು ಕ್ರೀಡಾಂಗಣದಲ್ಲಿ ಆಗಸ್ಟ್ 15ರಂದು ಬೆಳಗ್ಗೆ 9ಕ್ಕೆನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಡಿ.ಸಿ.ಸೂಚನೆ: ಇಲ್ಲಿದೆ ಪ್ರಮುಖ ಪಾಯಿಂಟ್ಸ್
- ನಗರದ ಡಿಎಆರ್ ಮೈದಾನದಲ್ಲಿ ಆಚರಿಸುತ್ತಿದ್ದ ಸ್ವಾತಂತ್ರ್ಯ ದಿನವನ್ನು ಸಾರ್ವಜನಿಕರ ಒತ್ತಾಯದ ಮೇರೆಗೆ 12 ವರ್ಷಗಳ ನಂತರ ನೆಹರು ಸ್ಟೇಡಿಯಂನಲ್ಲಿ ಆಚರಿಸಲು ನಿರ್ಣಯಿಸಿದೆ. ಸ್ಟೇಡಿಯಂನ ಸಿಂಥೆಟಿಕ್ ಟ್ರ್ಯಾಕ್ ಗೆ ಹಾನಿಗೊಳಗಾಗದಂತೆ ಕ್ರಮ ವಹಿಸಿದೆ.

- ನಗರದ ಹೃದಯ ಭಾಗದಲ್ಲಿ ಈ ಬಾರಿಯ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
- ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಿ, ಜವಾಬ್ದಾರಿ ನೀಡಲಾಗಿದೆ. ತಮಗೆ ವಹಿಸಲಾದ ಹೊಣೆಗಾರಿಕೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು.
- ವೇದಿಕೆ ಅಲಂಕಾರ, ರಾಷ್ಟ್ರಗೀತೆ, ನಾಡಗೀತೆ, ಪರೇಡ್ ಸಿದ್ಧತೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಪರೇಡ್ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಸಮರ್ಪಕ ತರಬೇತಿ ನೀಡಬೇಕು.
ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ಕುಮಾರ್, ಎಡಿಸಿ ಸಿದ್ಧಲಿಂಗರೆಡ್ಡಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸುಜಾತಾ, ಉಪವಿಭಾಗಾಧಿಕಾರಿ ಸತ್ಯನಾರಾಯಣ, ಸೂಡಾ ಆಯುಕ್ತ ವಿಶ್ವನಾಥ ಮುದ್ದಜ್ಜಿ, ತಹಶೀಲ್ದಾರ್ ರಾಜೀವ್ ಉಪಸ್ಥಿತರಿದ್ದರು.

preparations for Independence Day Celebration at Nehru Stadium







