ಶಿವಮೊಗ್ಗ: ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದೇ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಹಾಳಾಗುತ್ತಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ (Students) ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಕಾಲೇಜು ಶಿಕ್ಷಣ ಇಲಾಖೆ ಅಡಿಯ 432 ಪದವಿ ಕಾಲೇಜುಗಳಲ್ಲಿನ 6,000 ಕಾಯಂ ಉಪನ್ಯಾಸಕರಲ್ಲಿ 3,000ಕ್ಕಿಂತ ಹೆಚ್ಚು ಜನ ಈಗಾಗಲೇ ನಿವೃತ್ತಿ ಪಡೆದಿದ್ದಾರೆ. ಅತಿಥಿ ಉಪನ್ಯಾಸಕರ ನೆರವಿನಿಂದ ಪದವಿ ತರಗತಿಗಳು ಜರುಗುತ್ತಿವೆ. ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಹಕ್ಕು. ಆದರೆ ಗುಣಮಟ್ಟದ ಶಿಕ್ಷಣ ನೀಡಬೇಕಾದ ಸರ್ಕಾರ ಕರ್ತವ್ಯಪ್ರಜ್ಞೆ ಮರೆತು ಕಾಯಂ ಉಪನ್ಯಾಸಕರ ನೇಮಕಾತಿಗೆ ಕ್ರಮಕೈಗೊಳ್ಳದಿರುವುದು ಕಳವಳಕಾರಿ ಸಂಗತಿ ಎಂದರು.
ಜಿಲ್ಲಾಧಿಕಾರಿ ಆಗಮನಕ್ಕೆ ಪಟ್ಟು
ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆಗಮಿಸಿ ತಮ್ಮ ಮನವಿ ಆಲಿಸಬೇಕು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಆದರೆ ಜಿಲ್ಲಾಧಿಕಾರಿ ಅವರು ಮುಖ್ಯಮಂತ್ರಿ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿದ್ದರು. ಆಕ್ರೋಶಗೊಂಡ ವಿದ್ಯಾರ್ಥಿಗಳು ರಸ್ತೆ ತಡೆಗೆ ಯತ್ನಿಸಿದರು. ಈ ವೇಳೆ ಪೊಲೀಸರು ವಿದ್ಯಾರ್ಥಿಗಳನ್ನು ತಡೆದರು. ಆಗ ಪೊಲೀಸರು ಮತ್ತು ವಿದ್ಯಾರ್ಥಿಗಳ ಮಧ್ಯೆ ವಾಗ್ವಾದ ನಡೆಯಿತು.

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರತಿಭನಾ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿದರು.

ಎಬಿವಿಪಿ ನಗರ ಸಹಕಾರ್ಯದರ್ಶಿ ನಂದನ್.ಎಂ, ಚೇತನ್, ಸಚಿನ್, ಧನಂಜಯ, ವರುಣ್, ಕಾರ್ತಿಕ್, ಪ್ರವೀಣ್ ಇತರರಿದ್ದರು.



ಇದನ್ನೂ ಓದಿ » ಜನಶತಾಬ್ದಿ ರೈಲಿನಲ್ಲಿ ಬ್ಯಾಗ್ ಪತ್ತೆ, ಒಳಗಿತ್ತು ಲಕ್ಷ ಮೌಲ್ಯದ ಲ್ಯಾಪ್ಟಾಪ್, ಕಾಸ್ಮೆಟಿಕ್ಸ್, ನಗದು

Students
