ಶಿವಮೊಗ್ಗ: ಗಾಂಜಾ ಬೆಳೆಯುವುದು, ಸೇವನೆ, ಮಾರಾಟ, ಸಂಗ್ರಹಣೆ ಮತ್ತು ಸಾಗಣೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಪೊಲೀಸರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ (DGP) ಎಂ.ಎ.ಸಲೀಂ ಸೂಚಿಸಿದರು.
ಡಿಎಆರ್ ಆವರಣದಲ್ಲಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗಾಂಜಾ ಸೇರಿದಂತೆ ಮಾದಕ ದ್ರವ್ಯ ಮಾರಾಟದ ಬಗ್ಗೆ ತಳಮಟ್ಟದಲ್ಲಿ ಮಾಹಿತಿ ಸಂಗ್ರಹಿಸಿ ಎಂದು ಹೇಳಿದರು.
ಜಿಲ್ಲೆಯು ಭೌಗೋಳಿಕವಾಗಿ ಮಾತ್ರವಲ್ಲದೆ ಅಪರಾಧ ಕೃತ್ಯಗಳ ವರದಿಯಲ್ಲೂ ದೊಡ್ಡದಾಗಿದೆ. ಹೀಗಾಗಿ ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಮಟ್ಟ ಹಾಕುವಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಎಂದು ತಿಳಿಸಿದರು.

ನೊಂದವರಿಗೆ ನೆರವು ಹಾಗೂ ಅಪರಾಧಿಗೆ ಶಿಕ್ಷೆ ಎಂಬ ತತ್ವದ ಆಧಾರದ ಮೇಲೆ ಕಾರ್ಯನಿರ್ವಹಿಸಿ. ಈ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದ ತನಿಖೆ ಕೈಗೊಂಡು ಆರೋಪಿತರಿಗೆ ಶಿಕ್ಷೆ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿ. ತನಿಖೆಯಲ್ಲಿ ಲೋಪ ಬರದಂತೆ ಎಚ್ಚರಿಕೆ ವಹಿಸಿ ಎಂದು ಸಲಹೆ ನೀಡಿದರು.


ಮಹಜರುಗಳನ್ನು ನಡೆಸುವಾಗ ಮತ್ತು ಸಾಕ್ಷಿದಾರರನ್ನು ಆಯ್ದುಕೊಳ್ಳುವಾಗ ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರಿ ಪಂಚರನ್ನು ಮತ್ತು ಸರ್ಕಾರಿ ಸಾಕ್ಷಿದಾರರನ್ನು ಆಯ್ದುಕೊಳ್ಳಿ. ಇಂತಹ ನಡೆಯಿಂದ ಪ್ರಕರಣಗಳಲ್ಲಿ ಶಿಕ್ಷೆಯಾಗುವ ಪ್ರಮಾಣ ಹೆಚ್ಚಾಗುತ್ತದೆ ಎಂದರು.

ದಾವಣಗೆರೆ ಪೂರ್ವವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್ಪಿಗಳಾದ ಎ.ಜಿ. ಕಾರ್ಯಪ್ಪ, ರಮೇಶ್ ಕುಮಾರ್ ಉಪಸ್ಥಿತರಿದ್ದರು.

ಇದನ್ನೂ ಓದಿ » ಚಂದ್ರಗುತ್ತಿ ದೇಗುಲದಲ್ಲಿ ಹುಂಡಿ ಎಣಿಕೆ, ಎಷ್ಟಿತ್ತು ಭಕ್ತರು ಅರ್ಪಿಸಿದ ಕಾಣಿಕೆ?
DGP
