ಶಿವಮೊಗ್ಗ: ಹೊಳೆಹೊನ್ನೂರು ಮತ್ತು ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ಕಳೆದ ವಾರ ಬಿರುಗಾಳಿ ಮತ್ತು ಮಳೆಯಿಂದಾಗಿ ಸುಮಾರು 5 ರಿಂದ 6 ಸಾವಿರ ಹೆಕ್ಟೇರ್ನಷ್ಟು ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿದೆ. ರಾಜ್ಯ ಸರ್ಕಾರ ಈ ಭಾಗದ ಬೆಳೆ ಹಾನಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಪ್ರತಿ ಹೆಕ್ಟೇರ್ಗೆ ಒಂದು ಕನಿಷ್ಠ ₹1 ಲಕ್ಷ ಪರಿಹಾರ (compensation) ನೀಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದರು.
ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ವಿಶೇಷ ಅಧಿಕಾರ ಬಳಸಿಕೊಂಡು ಪರಿಹಾರ ನೀಡಿದ್ದರು. ಅದೇ ಮಾದರಿಯಲ್ಲಿ ಈಗನ ರಾಜ್ಯ ಸರ್ಕಾರವು ಹೆಜ್ಜೆ ಇಡಬೇಕು ಎಂದು ಒತ್ತಾಯಿಸಿದರು.

ಸಂಸದ ರಾಘವೇಂದ್ರ ಏನೇನು ಹೇಳಿದರು? ಇಲ್ಲಿದೆ ಪಾಯಿಂಟ್ಸ್
1 ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹೋಬಳಿಯಲ್ಲಿ ಬಿರುಗಾಳಿ ಸಹಿತ ಮಳೆಯಾಯಿತು. ಈ ಸಂಬಂಧ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ, ಪಕ್ಷದ ಅಧ್ಯಕ್ಷರಾದ ಮಲ್ಲೇಶಪ್ಪ ಅವರ ನೇತೃತ್ವದ ತಂಡ ಭೇಟಿ ನೀಡಿತ್ತು. ನಾನು ಕೂಡ ಕೆಲವು ಗ್ರಾಮಗಳಿಗೆ ಭೇಟಿ ನೀಡಿದ್ದೆ. ಸುಮಾರು 35 ಹಳ್ಳಿಗಳಲ್ಲಿ ಹಾನಿಯಾಗಿದೆ. ಹೊಳಲೂರು, ಹಾರನಹಳ್ಳಿ ಭಾಗದಲ್ಲಿ ಸುಮಾರು 25 ಗ್ರಾಮಗಳಿಗೆ ಹಾನಿಯಾಗಿದೆ.


2 ಬೆಳೆದು ನಿಂತ ಅಡಿಕೆ ಮರಗಳಲ್ಲಿ ಕೊಯ್ಲಿಗೆ ಬಂದಿದ್ದ ಫಸಲು ಇತ್ತು. ಅವೆಲ್ಲ ಗೊನೆ ಸಹಿತ ಮುರಿದು ಬಿದ್ದಿವೆ. ಮನೆಗಳಿಗೆ ಭಾರಿ ಪ್ರಮಾಣದ ಹಾನಿಯಾಗಿದೆ. ಗೃಹೋಪಯೋಗಿ ವಸ್ತುಗಳು ಕೂಡ ಕೊಚ್ಚಿ ಹೋಗಿವೆ. ಒಬ್ಬ ವ್ಯಕ್ತಿ ಪ್ರಾಣ ಕಳೆದುಕೊಂಡಿರುವುದು ವರದಿಯಾಗಿದೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದರಿಂದಾಗಿ ರೈತರಿಗೆ ದಿಕ್ಕು ತೋಚದಂತಾಗಿದೆ.
3 ಸುಮಾರು 10,000 ಹೆಕ್ಟೇರ್ ಪ್ರದೇಶದಲ್ಲಿ ಸುಮಾರು 5 ರಿಂದ 6 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ತೋಟ ನಾಶವಾಗಿವೆ. ಇಂತಹ ವಾತಾವರಣ ಏಪ್ರಿಲ್ ತಿಂಗಳಲ್ಲಿ ಎಂದಿಗೂ ಆಗಿರಲಿಲ್ಲ. ಇದಕ್ಕೆ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ನಿಂದ ಪ್ರತಿ ಹೆಕ್ಟೇರ್ಗೆ ₹33,000 ಪರಿಹಾರ ನೀಡಬೇಕು ಎಂಬ ನಿಯಮವಿದೆ. ಪರಿಹಾರದ ಮೊತ್ತದಲ್ಲಿ ಕೇಂದ್ರ ಸರ್ಕಾರ ಶೇ.75ರಷ್ಟು, ರಾಜ್ಯ ಸರ್ಕಾರ ಶೇ.25ರಷ್ಟು ಪಾಲು ನೀಡಬೇಕು ಎಂಬ ನಿಯಮವಿದೆ. ಆದರೆ ಹಾನಿಯನ್ನು ಗಮನಿಸಿದಾಗ ಈ ಮೊತ್ತದ ಪರಿಹಾರ ಸಾಕಾಗುವುದಿಲ್ಲ.
ಇದನ್ನೂ ಓದಿ : ವಿನೋದ್ಗಾಗಿ ಕಂಬನಿ ಮಿಡಿದ ಭದ್ರಾವತಿ, VISLನಿಂದ ಮಹತ್ವದ ನಿರ್ಧಾರ ಪ್ರಕಟ
4 ಮನೆ ಹಾನಿಗೆ ಎನ್ಡಿಆರ್ಎಫ್ ನಿಯಮದ ಪ್ರಕಾರ ಪ್ರತಿ ಮನೆಗೆ ₹1,50,000 ಪರಿಹಾರ ನೀಡಲು ಅವಕಾಶವಿತ್ತು. ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ₹5 ಲಕ್ಷ ಪರಿಹಾರ ನೀಡಿದ್ದರು. ರಾಜ್ಯ ಸರ್ಕಾರ ತನ್ನ ವಿಶೇಷ ಅಧಿಕಾರ ಬಳಸಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಈ ಭಾಗದ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್ಗೆ ₹1 ಲಕ್ಷ ಪರಿಹಾರ ನೀಡಬೇಕು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಪ್ರಮುಖರಾದ ಎಸ್.ದತ್ತಾತ್ರಿ, ಎಸ್.ಎಸ್.ಜ್ಯೋತಿಪ್ರಕಾಶ್, ಮಾಲತೇಶ್ ಸೇರಿದಂತೆ ಹಲವರು ಇದ್ದರು.