ಶಿವಮೊಗ್ಗ: ಮನುಷ್ಯನ ಜೀವನದಲ್ಲಿ ಜನನ ಮತ್ತು ಮರಣಗಳ ಮಧ್ಯದ ಅವಧಿಯನ್ನು ಸಾರ್ಥಕ ಕಾರ್ಯಗಳಿಂದ ಪೂರ್ಣಗೊಳಿಸಿದಾಗ ಮಾತ್ರ ಆದರ್ಶ ಬದುಕು ನಡೆಸಲು ಸಾಧ್ಯ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಹೇಳಿದರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಟಿ.ವಿ.ಈಶ್ವರಯ್ಯನವರ ಗುರುಲಿಂಗ ಜಂಗಮಾರಾಧನೆ ಹಾಗೂ ಶ್ರದ್ಧಾಂಜಲಿ ಸಭೆಯ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.
ಕರ್ತವ್ಯದ ಹಾದಿಯಲ್ಲಿ ನಡೆಯುವವನಿಗೆ ಕೀರ್ತಿ ತಾನಾಗಿಯೇ ಹುಡುಕಿಕೊಂಡು ಬರುತ್ತದೆ. ಈಶ್ವರಯ್ಯನವರು ತಮ್ಮ ಜೀವಿತಾವಧಿಯಲ್ಲಿ ಹಲವು ಸಂಘ ಸಂಸ್ಥೆಗಳನ್ನು ಹುಟ್ಟುಹಾಕಿ ಸಕ್ರಿಯವಾಗಿ ಸೇವೆ ಸಲ್ಲಿಸುವ ಮೂಲಕ ಸಮಾಜದ ಆಸ್ತಿಯಾಗಿದ್ದರು ಎಂದು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಮಾತನಾಡಿ, ಟಿ.ವಿ. ಈಶ್ವರಯ್ಯನವರು ಸಮಾಜ ಮತ್ತು ಧರ್ಮಕ್ಕಾಗಿ ಶ್ರಮಿಸಿದವರು. ಅನೇಕ ಸಂಸ್ಥೆಗಳ ಅಧ್ಯಕ್ಷರಾಗಿ ಅವರು ಮಾಡಿದ ಕಾರ್ಯಗಳು ಎಂದಿಗೂ ಅಜರಾಮರ ಎಂದು ಬಣ್ಣಿಸಿದರು.

ಬಿಳಿಕಿ ಹಿರೇಮಠದ ರಾಚೊಟೇಶ್ವರ ಸ್ವಾಮೀಜಿ, ರಟ್ಟಿಹಳ್ಳಿ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಡಾ. ಅಭಿನವ ಸಿದ್ಧಲಿಂಗ ಸ್ವಾಮೀಜಿ, ಡಾ. ನಾಗಭೂಷಣ ಸ್ವಾಮೀಜಿ, ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಎಂ.ಎಲ್.ಸಿ ರುದ್ರೇಗೌಡ, ತೇಜಸ್ವಿನಿ ರಾಘವೇಂದ್ರ, ಸೇರಿದಂತೆ ಹಲವರು ಉಪಸ್ಥಿತರಿದ್ದರು.


