ಸಾಗರ: ಭಾರಿ ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕತ್ತಲೆ ಬಜಾರಿನ ಜೆ.ಪಿ. ನಗರದ ನಿವಾಸಿ ಕರೀಂ ಸಾಬ್ ಎಂಬುವರ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್, ಪರಿಶೀಲನೆ ನಡೆಸಿದರು. ಅಲ್ಲದೆ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು. ➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚನೆ
ಸಾಗರ ತಾಲ್ಲೂಕಿನಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಹಲವು ಮನೆಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಬೇಕು. ಹಾನಿಗೊಳಗಾದ ಜಾಗಗಳಿಗೆ ತಕ್ಷಣ ಭೇಟಿ ನೀಡಿ, ತಪಾಸಣೆ ನಡೆಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಸೂಚನೆ ನೀಡಿದ್ದಾರೆ.

ಕಂಟ್ರೋಲ್ ರೂಂ ಆರಂಭ
ಪ್ರಕೃತಿ ವಿಪತ್ತು ನಿರ್ವಹಣೆಗಾಗಿ ತಾಲ್ಲೂಕು ಆಡಳಿತದಿಂದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ. ಮಳೆಯಿಂದಾಗಿ ಯಾವುದೇ ತೊಂದರೆ ಎದುರಾದರೂ ಸಾರ್ವಜನಿಕರು ತಕ್ಷಣ ನೆರವು ಪಡೆಯಲು ತಾಲ್ಲೂಕು ಕಚೇರಿಯ 08183-226074 ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
“ತಾಲ್ಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮನೆ ಹಾನಿ ಪ್ರಕರಣಗಳು ವರದಿಯಾಗಿವೆ. ತಕ್ಷಣವೇ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ನೆರವಿಗಾಗಿ 24 ಗಂಟೆಯೂ ಲಭ್ಯವಿರುವ ಸಹಾಯವಾಣಿ ತೆರೆಯಲಾಗಿದೆ. ತುರ್ತು ಸಂದರ್ಭ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು.”
– ಡಾ. ಪ್ರತಿಭಾ.ಆರ್, ಸಾಗರ ತಹಶೀಲ್ದಾರ್