ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯಡಿ ರಿಯಾಯಿತಿ ದರದಲ್ಲಿ ಸರ್ಕಾರಿ ಸಾಲ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ಒಟ್ಟು ₹7.50 ಲಕ್ಷ ಪಡೆದು ವಂಚಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ತುಮಕೂರು ಮೂಲದ ವ್ಯಕ್ತಿಯೊಬ್ಬ ತಾನು ಮಾಜಿ ಸಚಿವರೊಬ್ಬರ ಆಪ್ತ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡಿದ್ದನು. ತನಗೆ ಹಿರಿಯ ನಾಯಕರು ಹಾಗೂ ಅಧಿಕಾರಿಗಳ ಪರಿಚಯವಿದ್ದು, ಸಮಾಜ ಕಲ್ಯಾಣ ಇಲಾಖೆಯ ಇಂಟರೆಸ್ಟ್ ಸಬ್ಸಿಡಿ ಸ್ಕೀಮ್ ಅಡಿಯಲ್ಲಿ ₹1.45 ಕೋಟಿ ಸಾಲ ಮಂಜೂರು ಮಾಡಿಸಿಕೊಡುವುದಾಗಿ ನಂಬಿಸಿದ್ದ. ಸಾಲದ ಹಣವನ್ನು ಸರ್ಕಾರಕ್ಕೆ ವಾಪಸ್ ನೀಡುವ ಅಗತ್ಯವಿಲ್ಲ ಎಂದು ಉದ್ಯಮಿಗೆ ತಿಳಿಸಿದ್ದ.

ಸಾಲ ಮಂಜೂರಾತಿಗೆ ಅಧಿಕಾರಿಗಳಿಗೆ ನೀಡಬೇಕೆಂದು ಹೇಳಿ ಶಿವಮೊಗ್ಗದ ಉದ್ಯಮಿಯ ಅಂಗಡಿಯಲ್ಲಿ ಹಂತ ಹಂತವಾಗಿ ₹1,05,200 ನಗದಾಗಿ ಪಡೆದಿದ್ದನು. ನಂತರ 2025ರ ಆಗಸ್ಟ್ನಿಂದ ಡಿಸೆಂಬರ್ವರೆಗಿನ ಅವಧಿಯಲ್ಲಿ ಆನ್ಲೈನ್ ಮೂಲಕ ₹6,44,800 ಸೇರಿ ಒಟ್ಟು ₹7.50 ಲಕ್ಷ ಹಣವನ್ನು ಪಡೆದುಕೊಂಡಿದ್ದನು ಎಂದು ಆರೋಪಿಸಲಾಗಿದೆ.
ಹಣ ಪಡೆದ ಬಳಿಕ ಸಾಲದ ಮೊತ್ತ ಖಾತೆಗೆ ಜಮಾ ಆಗುತ್ತದೆ ಎಂದು ಸುಳ್ಳು ಹೇಳುತ್ತಾ ಉದ್ಯಮಿಯ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ. ಇದೇ ರೀತಿ ಉದ್ಯಮಿಯ ಪರಿಚಿತರು ಹಾಗೂ ಸ್ನೇಹಿತರಿಗೂ ಸಾಲ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಆರೋಪಿಸಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.