ಶಿವಮೊಗ್ಗ: ಕಳೆದ 37 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಡಕಾಯಿತಿ ಪ್ರಕರಣದ ಆರೋಪಿಯನ್ನು ಮಾಳೂರು ಪೊಲೀಸ್ ಠಾಣೆ ಸಿಬ್ಬಂದಿ ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
1989ರಲ್ಲಿ ನಡೆದ ಡಕಾಯಿತಿ
1989ನೇ ಸಾಲಿನಲ್ಲಿ ತೀರ್ಥಹಳ್ಳಿ ತಾಲೂಕಿನ ಮೃಗವಧೆ ಗ್ರಾಮದ ಗುಡ್ಡೆಕೊಪ್ಪದಲ್ಲಿ ಡಕಾಯಿತಿ ನಡೆದಿತ್ತು. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಮಂಗಳೂರಿನ ಅಬ್ದುಲ್ ಖಾದರ್ ಅಲಿಯಾಸ್ ಮೊಣು (57 ವರ್ಷ) ಘಟನೆಯ ನಂತರದಿಂದ ತಲೆಮರಿಸಿಕೊಂಡಿದ್ದ.

ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ
ಆರೋಪಿಯು ಕೇರಳ ರಾಜ್ಯದ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ಪುರ ಸಂಗೋಡಿ, ಪಾಡಿ ಎಂಬಲ್ಲಿ ವಾಸವಿರುವ ಬಗ್ಗೆ ಖಚಿತ ಮಾಹಿತಿ ಕಲೆಹಾಕಿದ ಪೊಲೀಸರು, ಅಲ್ಲಿಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಆತನನ್ನು ಶಿವಮೊಗ್ಗ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರ್ಯಪ್ಪ ಎ.ಜಿ. ಹಾಗೂ ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ ಕಲಗುಚ್ಚಿ ಅವರ ಮಾರ್ಗದರ್ಶನದಲ್ಲಿ ಮಾಳೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಮಾಳೂರು ಠಾಣೆ ಇನ್ಸ್ಪೆಕ್ಟರ್ ರಾಜಶೇಖರ್ ಹಾಗೂ ಪಿಎಸ್ಐ ಸುನಿಲ್ ಬಿ.ಸಿ. ಅವರ ನಿರ್ದೇಶನದಂತೆ ಠಾಣೆ ಸಿಬ್ಬಂದಿ ಮೇಘರಾಜ್ ಮತ್ತು ಅಭಿಲಾಶ್ ಅವರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.