ಶಿವಮೊಗ್ಗ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ರಾಜ್ಯದಲ್ಲಿ 1.39 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿದ್ದು, ಗೌರವಧನದ ಹೆಸರಿನಲ್ಲಿ ಸರ್ಕಾರ ಅವರನ್ನು ಶೋಷಣೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಾಮಾಜಿಕ ಭದ್ರತೆ ಹಾಗೂ ಕನಿಷ್ಠವೇತನವಿಲ್ಲದೆ, ಸರ್ಕಾರದ ಹಲವು ಸರ್ವೆ ಕಾರ್ಯಗಳನ್ನು ಮಾಡಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

24 ಬೇಡಿಕೆಗಳು
ಗೌರವಧನ ಎಂಬ ಹಣೆಪಟ್ಟಿ ತೆಗೆದು, ಕಾರ್ಯಕರ್ತೆಯರಿಗೆ ₹26,000 ಹಾಗೂ ಸಹಾಯಕಿಯರಿಗೆ ₹20,000 ವೇತನ ಜಾರಿ ಮಾಡಬೇಕು. ಇಲಾಖೆ ಕೆಲಸ ಬಿಟ್ಟು ಬೇರೆ ಕೆಲಸಕ್ಕೆ ನಿಯೋಜಿಸಬಾರದು. ಎಲ್ಲಾ ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ತೆರೆಯಬೇಕು. ಗೌರವಧನವನ್ನು ಪ್ರತಿತಿಂಗಳು ಸರಿಯಾದ ಸಮಯಕ್ಕೆ ನೀಡಬೇಕು. ನಿವೃತ್ತಿಯಾದವರಿಗೆ ಎನ್ಪಿಎಸ್ ಹಣ ಬಿಡುಗಡೆ ಮಾಡಬೇಕು ಹಾಗೂ ಇಎಸ್ಐ ಸೌಲಭ್ಯ ನೀಡಬೇಕು ಎಂಬುದು ಸೇರಿದಂತೆ ಸುಮಾರು 24 ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಸಾವಿರ ಸಾವಿರ ಕಾರ್ಯಕರ್ತೆಯರಿಂದ ಮೆರವಣಿಗೆ
ಮಹಾನಗರಪಾಲಿಕೆ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ಇದರಿಂದಾಗಿ ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರ ಕೆಲಕಾಲ ಸ್ಥಬ್ಧವಾಗಿತ್ತು.
ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷೆ ಬಿ. ಪ್ರೇಮಾ, ಜಿಲ್ಲಾಧ್ಯಕ್ಷೆ ನಾಗರತ್ನ, ಪ್ರಮುಖರಾದ ಯಶೋಧ, ಇಂದಿರಾ, ಆಶಾ, ಶೀಲಾ, ನಾಗರತ್ನ, ಭಾರತಿ ಸೇರಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪಾಲ್ಗೊಂಡಿದ್ದರು.