ಶಿವಮೊಗ್ಗ: ಆಟೋ ಕಾಂಪ್ಲೆಕ್ಸ್ನ ಗ್ಯಾರೇಜ್ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಇಬ್ಬರು ಕಿಶೋರ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಆಟೋ ಕಾಂಪ್ಲೆಕ್ಸ್ ಪ್ರದೇಶದಲ್ಲಿ ದಿಢೀರ್ ತಪಾಸಣೆ ನಡೆಸಿದರು. ಈ ವೇಳೆ ಗ್ಯಾರೇಜ್ ಒಂದರಲ್ಲಿ ಕಿಶೋರ ಕಾರ್ಮಿಕರು ಪತ್ತೆಯಾಗಿದ್ದಾರೆ. ತಕ್ಷಣವೇ ಅವರನ್ನು ಬಿಡುಗಡೆಗೊಳಿಸಿದ ಅಧಿಕಾರಿಗಳು ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ. ಅಲ್ಲದೆ, ಗ್ಯಾರೇಜ್ ಮಾಲೀಕರಿಗೆ ಬಾಲ ಕಾರ್ಮಿಕ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜಿಲ್ಲೆಯ ಯಾವುದೇ ಅಂಗಡಿ ಅಥವಾ ವಾಣಿಜ್ಯ ಸಂಸ್ಥೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸುವುದು ನಿಷೇಧ. ಹಾಗೆಯೇ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ತೊಡಗಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ನಿಯಮ ಉಲ್ಲಂಘಿಸಿದರೆ ತಪ್ಪಿತಸ್ಥರಿಗೆ ಎರಡು ವರ್ಷಗಳವರೆಗೆ ಜೈಲು ಅಥವಾ ₹50,000 ವರೆಗೆ ದಂಡ ವಿಧಿಸಲಾಗುವುದು.
– ವೇಣುಗೋಪಾಲ್, ಕಾರ್ಮಿಕ ಅಧಿಕಾರಿ
ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕಿ ಸುಖೀತಾ ಕೆ.ಸಿ, ಯೋಜನಾ ನಿರ್ದೇಶಕ ರಘುನಾಥ್ ಎ.ಎಸ್, ವಿನೋಬನಗರ ಪೊಲೀಸ್ ಠಾಣೆಯ ಇಸ್ರತ್ ಅಲಿ ಬೇಗ್, ಶಿಕ್ಷಣ ಇಲಾಖೆಯ ಪ್ರವೀಣ್, ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ವನಜಾ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಅಭಿಷೇಕ್, ಅರ್ಪಿತಾ ಮತ್ತು ಕಾವ್ಯ ಉಪಸ್ಥಿತರಿದ್ದರು.