ಭದ್ರಾವತಿ: ಕಡವೆ ಬೇಟೆಯಾಡಿ ಮಾಂಸ ಕಟ್ ಮಾಡುತ್ತಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಎಂ.ಸಿ. ಹಳ್ಳಿ ಶಾಖೆ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ದಾಳಿ ವೇಳೆ ಅಂದಾಜು 70 ಕೆ.ಜಿ ಕಡವೆ ಮಾಂಸ ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ್ದ ಒಂದು ನಾಡಬಂದೂಕು, ಒಂದು ದ್ವಿಚಕ್ರ ವಾಹನ, ಕತ್ತಿ, ಚಾಕು, ಚೂರಿ ಹಾಗೂ ಹಣೆ ಬ್ಯಾಟರಿಯನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಭದ್ರಾವತಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಹಾಗೂ ತರೀಕೆರೆ ಉಪ ವಿಭಾಗದ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಲಕ್ಕವಳ್ಳಿ ವಲಯ ಅರಣ್ಯ ಅಧಿಕಾರಿ ಇಂದು ಜಿ.ಎಸ್., ಉಪ ವಲಯ ಅರಣ್ಯಾಧಿಕಾರಿಗಳಾದ ಚನ್ನೇಗೌಡ ಜಿ.ಟಿ., ಮನೋಜ್ ಕೆ.ಎಸ್., ಗಸ್ತು ಅರಣ್ಯ ಪಾಲಕರಾದ ಸಂತೋಷ್ ಎಂ.ಬಿ., ಬಾಲರಾಜ್, ಪುನೀತ್, ವಿಶ್ವನಾಥ್, ಅರಣ್ಯ ವೀಕ್ಷಕಿ ಶೋಭಾ ಹಾಗೂ ವಲಯದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.