ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021
ಬದುಕಿನಲ್ಲಿ ಉನ್ನತ ಸ್ಥಾನಕ್ಕೇರಲು ಶಿಕ್ಷಣ ಬಿಟ್ಟರೆ ಬೇರೆ ದಾರಿ ಇಲ್ಲ. ಆದ್ದರಿಂದ ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಬಿಟ್ಟು ಬೇರೆ ದುಷ್ಚಟಗಳ ಬಗ್ಗೆ ಯೋಚಿಸದೇ, ತಮ್ಮ ನಡತೆಯನ್ನು ತಿದ್ದಿಕೊಳ್ಳಿ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು.
ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪೊಲೀಸ್ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಮಾದಕ ವ್ಯಸನಿಗಳಾದರೆ ನೀವು ಮಾತ್ರವಲ್ಲ, ಇಡೀ ಕುಟುಂಬ ಸಂಕಷ್ಟಕ್ಕೀಡಾಗುತ್ತದೆ. ನಿಮ್ಮ ಸುತ್ತಮುತ್ತಲೂ ಯಾವುದೇ ಮಾದಕ ವಸ್ತುಗಳು, ಗಾಂಜಾ ಮಾರಾಟ ಅಥವಾ ಆಮಿಷಗಳನ್ನೊಡ್ಡಿ ಮಾದಕ ದ್ರವ್ಯ ಸಾಗಾಟ ಅಥವಾ ಮಾರಾಟಕ್ಕೆ ಪ್ರೋತ್ಸಾಹ ನೀಡುವುದು ಕಂಡು ಬಂದಲ್ಲಿ ಕೂಡಲೇ ಪ್ರಾಂಶುಪಾಲರಿಗೆ ಅಥವಾ ಪೊಲೀಸರಿಗೆ ದೂರು ನೀಡಿ. ನಿಮ್ಮ ಹೆಸರನ್ನು ಗೌಪ್ಯವಾಗಿ ಇಡಲಾಗುತ್ತದೆ. ಆದಷ್ಟು ಸಮಾಜ ಒಳ್ಳೆಯದಾಗಲು ಪ್ರಯತ್ನಿಸಿ ಎಂದರು.
ಒಂದು ಸಲ ಮಾದಕ ಚಟಕ್ಕೆ ಸಿಕ್ಕಿಬಿದ್ದರೆ ಬದುಕಿನಲ್ಲಿ ಅದೊಂದು ಕಪ್ಪು ಚುಕ್ಕೆಯಾಗುತ್ತದೆ. ಸಮಾಜಕ್ಕೆ ಒಂದು ಕಳಂಕವಾಗುತ್ತೀರಿ. ಹಲವಾರು ಸೌಲಭ್ಯಗಳನ್ನು ಕಳೆದುಕೊಳ್ಳುತ್ತೀರಿ. ಆದ್ದರಿಂದ ಮಾದಕ ವ್ಯಸನಗಳಿಗೆ ಬಲಿಯಾಗಿ ದಾರಿ ತಪ್ಪದಿರಿ ಎಂದು ಸಲಹೆ ನೀಡಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಾಫ್ ಹುಸೇನ್ ಎಸ್.ಎ, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಸರಸ್ವತಿ, ಎರಡನೇ ಹೆಚ್ಚುವರಿ ನ್ಯಾಯಾಧೀಶರಾದ ಕೃಪಾ ಸಿ.ಎಲ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ಮೊದಲಾದವರಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200