ಶಿವಮೊಗ್ಗ ಲೈವ್.ಕಾಂ | BHADRAVATHI | 29 ಡಿಸೆಂಬರ್ 2019
ಭದ್ರಾವತಿ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಗ್ರಾಮದಲ್ಲಿ ಘಟನೆ ನಡೆದಿದೆ. ಶಾಂತಕುಮಾರ್ (50) ಅವರ ಮೇಲೆ ಹಲ್ಲೆಯಾಗಿದೆ.
ಹೇಗಾಯ್ತು ಘಟನೆ? ಕಾರಣವೇನು?
ಶನಿವಾರ ರಾತ್ರಿ ಶಾಂತಕುಮಾರ್ ಅವರು ಮನೆಯಲ್ಲಿ ಊಟ ಮಾಡುತ್ತಿದ್ದ ವೇಳೆ, ಅದೇ ಗ್ರಾಮದ ಮೂವರು ಮನೆಗೆ ಬಂದಿದ್ದಾರೆ. ಶಾಂತಕುಮಾರ್ ಅವರನ್ನು ಮನೆಯಿಂದ ಹೊರಗೆ ಕರೆಯಿಸಿಕೊಂಡು, ಏಕಾಏಕಿ ಹಲ್ಲೆ ನಡೆಸಿದ್ದಾರೆ. ಹೊಟ್ಟೆ, ಎಡಗಾಲಿನ ತೊಡೆ ಮತ್ತು ಎಡಗಣ್ಣಿನ ಬಳಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಬಿಡಿಸಲು ಶಾಂತಕುಮಾರ್ ಅವರು ಜೋರಾಗಿ ಕೂಗಿಕೊಂಡಿದ್ದಾರೆ. ಅಕ್ಕಪಕ್ಕದ ಮನೆಯವರು ಬರುತ್ತಿದ್ದಂತೆ ಮೂವರು ಪರಾರಿಯಾಗಿದ್ದಾರೆ.
ಕೂಡಲೆ ಶಾಂತಕುಮಾರ್ ಅವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಂಬದಾಳು ಹೊಸೂರು ಗ್ರಾಮದ ಮಂಜುನಾಥ್, ಗಿರೀಶ್ ಮತ್ತು ಸಿದ್ದಾಪುರ ಗ್ರಾಮದ ಮಧು ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]