ಶಿವಮೊಗ್ಗ ಲೈವ್.ಕಾಂ | 6 ಮೇ 2019
ಗೃಹ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಇವತ್ತು ಪ್ರತಿಭಟನೆ ನಡೆಸಲಾಯಿತು. ಶಾಸಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ರಾಜ್ಯದ ಸಮ್ಮಿಶ್ರ ಸರ್ಕಾರ ಸೇಡಿನ ಕ್ರಮ ಕೈಗೊಳ್ಳುತ್ತಿದೆ. ಬಿಜೆಪಿ ವಿರುದ್ಧ ನಡೆಯುತ್ತಿದ್ದ ಸೇಡಿನ ರಾಜಕಾರಣದ ವಿರುದ್ಧ ಹಲವು ಬಾರಿ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಆದರೆ ಸಮ್ಮಿಶ್ರ ಸರ್ಕಾರದ ವಿರೋಧಿಗಳ ವಿರುದ್ಧ ಮಾತ್ರ ಕ್ರಮಕ್ಕೆ ಮುಂದಾಗಿದೆ.
ಯಶ್, ದರ್ಶನ್, ಮೋದಿಗೆ ಬೆದರಿಕೆ
ಪ್ರಧಾನಿ ಮೋದಿಯವರನ್ನು ಹತ್ಯೆ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ಬಿಜೆಪಿ ದೂರು ನೀಡಿದ್ದರೂ, ರಾಜ್ಯ ಸರ್ಕಾರ ಕ್ರಮ ಕೈಗೊಂಡಿಲ್ಲ. ಇನ್ನು, ಜೆಡಿಎಸ್ ಶಾಸಕ ನಾರಾಯಣಗೌಡ, ನಟ ದರ್ಶನ್ ಮತ್ತು ಯಶ್’ಗೆ ಬೆದರಿಕೆ ಹಾಕಿದ್ದರು. ಈ ಎರಡು ಪ್ರಕರಣಗಳಲ್ಲಿ ಸರ್ಕಾರ ಪಕ್ಷಪಾತದ ಧೋರಣೆ ಅನುಸರಿಸಿದೆ ಎಂದು ಆರೋಪಿಸಿದರು.
ಮಾಧ್ಯಮಗಳು ಸಚಿವರನ್ನು ಟೀಕಿಸುವುದೇ ಅಪರಾಧ ಎನ್ನುವಂತಾಗಿದೆ. ಇನ್ನು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಮಾಧ್ಯಮ ಪ್ರತಿನಿಧಿಗಳನ್ನು ದೂಷಿಸುವುದು, ಮಾಧ್ಯಮಗಳನ್ನು ಬಹಿಷ್ಕರಿಸಿರುವುದಾಗಿ ಹೇಳಿಕೆ ನೀಡಿರುವುದು ಸರ್ವಾಧಿಕಾರಿ ಮನೋಭಾವದ ಪ್ರತೀಕವಾಗಿದೆ ಎಂದು ಬಿಜೆಪಿ ಮುಖಂಡರು ದೂರಿದರು.
ಸೋಷಿಯಲ್ ಮೀಡಿಯಾದಲ್ಲಿ ಟೀಕಿಸಿದರೂ ಜೈಲು
ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದಕ್ಕೆ, ಬಿಜೆಪಿ ಹಿತೈಷಿಗಳು ಮತ್ತು ಹಿರಿಯ ಪತ್ರಕರ್ತರನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ಇದಕ್ಕೆ ಗೃಹ ಸಚಿವರೇ ಆಸಕ್ತಿ ವಹಿಸಿದ್ದಾರೆ. ಗೃಹ ಸಚಿವ ಎಂ.ಬಿ.ಪಾಟೀಲ್ ಬರೆದಿದ್ದರೆನ್ನಲಾದ ಪತ್ರವನ್ನು ಜಾಲತಾಣದಲ್ಲಿ ಫಾರ್ವರ್ಡ್ ಮಾಡಿದ್ದಕ್ಕೆ, ಹೇಮಂತ್ ಕುಮಾರ್ ಎಂಬುವವರನ್ನು ಬಂಧಿಸಲಾಗಿದೆ. ಗೃಹ ಸಚಿವರು ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ದೂರಿದರು.
ಶಾಸಕರಾದ ಕೆ.ಎಸ್.ಈಶ್ವರಪ್ಪ, ಆಯನೂರು ಮಂಜುನಾಥ್, ಎನ್.ಜಿ.ನಾಗರಾಜ್, ಎಸ್.ಎನ್.ಚನ್ನಬಸಪ್ಪ, ಮೇಯರ್ ಲತಾ ಗಣೇಶ್, ಬಿ.ಆರ್. ಮಧುಸೂದನ್, ಮಾಲತೇಶ್, ಸುವರ್ಣ ಶಂಕರ್, ಜೆ.ಇ.ವಿರೂಪಾಕ್ಷಪ್ಪ, ರಾಮು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]