ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯ ಪರಿಶೀಲನೆ ನಡೆಸಿದರು. ಇನ್ನೊಂದು ವರ್ಷದಲ್ಲಿ ಇಲ್ಲಿ ವಿಮಾನ ಹಾರಾಟ ಆರಂಭವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇವತ್ತು ಬೆಳಗ್ಗೆ ಸೋಗಾನೆಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ, ಕಾಮಗಾರಿ ಪರಿಶೀಲಿಸಿದರು. ರನ್ವೇಯಲ್ಲಿ ಸಂಚರಿಸಿದ ಸಿಎಂ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
1.7 ಕಿ.ಮೀ ರನ್ ವೇ ರೆಡಿ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, 384 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಈಗಾಗಲೇ 1.7 ಕಿ.ಮೀ ರನ್ ವೇ ಕಾಮಗಾರಿ ಪೂರ್ಣಗೊಂಡಿದೆ. ಸದ್ಯದಲ್ಲೇ ಎರಡನೇ ಹಂತದ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಟರ್ಮಿನಲ್ ಬಿಲ್ಡಿಂಗ್ ಕೆಲಸ ಆಗಲಿದೆ. ಜೊತೆ ಜೊತೆಗೆ ಎಲ್ಲವು ಆದರೆ ಕಾಮಗರಿ ಬೇಗ ಪೂರ್ಣಗೊಳ್ಳಲಿದೆ ಎಂದರು.
ಇನ್ನೊಂದು ವರ್ಷದಲ್ಲಿ ವಿಮಾನ ಹಾರಾಟ
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇನ್ನೊಂದು ವರ್ಷದಲ್ಲಿ ವಿಮಾನ ಹಾರಾಟ ಆರಂಭವಾಗಲಿದೆ. ರಾತ್ರಿ ವೇಳೆಯಲ್ಲೂ ಲ್ಯಾಂಡಿಂಗ್ಗೂ ವ್ಯವಸ್ಥೆ ಮಾಡಲಾಗುತ್ತಿದೆ. ಹಣಕಾಸಿನ ತೊಂದರೆ ಇಲ್ಲ. ಹಾಗಾಗಿ ಕಾಮಗಾರಿಗೆ ಯಾವುದೆ ಅಡೆತಡೆ ಉಂಟಾಗಬಾರದು ಎಂದು ಸಿಎಂ ಸೂಚಿಸಿದರು.
ನಾಲ್ಕು ಎಕರೆಯಲ್ಲಿ ಜೆಲ್ಲಿ
ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಜೆಲ್ಲಿಗೆ ಕಾಮಗಾರಿ ಸ್ಥಳದಲ್ಲೇ ಸ್ಥಳ ನಿಗದಿಪಡಿಸಲಾಗಿದೆ. ನಾಲ್ಕು ಎಕರೆ ಜಾಗದಲ್ಲಿ ಕ್ವಾರಿಗೆ ವ್ಯವಸ್ಥೆ ಮಾಡಲಾಗಿದೆ. ಕಾಮಗಾರಿಗೆ ಅಗತ್ಯವಿರುವಷ್ಟು ಜೆಲ್ಲಿ ತೆಗೆದ ಬಳಿಕ ಕ್ವಾರಿ ಪ್ರದೇಶದಲ್ಲಿ ಮಣ್ಣು ಹಾಕಿ ಸಮ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಆಯನೂರು ಮಂಜುನಾಥ್, ಶಾಸಕ ಅಶೋಕ್ ನಾಯ್ಕ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ಪ್ರಮುಖರು ಇದ್ದರು.
VIDEO REPORT
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]