ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022
ಶಿವಮೊಗ್ಗ ಜಿಲ್ಲೆಯಾದ್ಯಂತ ಕಾಲೇಜುಗಳು ಪುನಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಿಜಾಬ್, ಕೇಸರಿ ಶಾಲು ಸಂಘರ್ಷದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯು ರಜೆ ಘೋಷಿಸಲಾಗಿತ್ತು.
ಸಂಘರ್ಷದ ಬಳಿಕ ಕಾಲೇಜುಗಳು ಪುನಾರಂಭ ಆಗುತ್ತಿದೆ. ಇದಕ್ಕೆ ಪೂರ್ವ ಸಿದ್ಧತೆಯನ್ನು ಕೈಗೊಳ್ಳಲಾಗುತ್ತಿದೆ. ಗಲಾಟೆ, ಕಲ್ಲು ತೂರಾಟದ ಹಿನ್ನೆಲೆ ಕಾಲೇಜುಗಳು ಕಟ್ಟುನಿಟ್ಟು ಕ್ರಮ ಕೈಗೊಂಡಿವೆ. ಖಾಸಗಿ ಶಾಲೆ, ಕಾಲೇಜು ಕ್ಯಾಂಪಸ್’ಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ.
ಏನೆಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ?
» ಖಾಸಗಿ ಶಾಲೆ, ಕಾಲೇಜುಗಳಲ್ಲಿ ಕಟ್ಟುನಿಟ್ಟು ನಿಯಮಗಳನ್ನು ಜಾರಿಗೊಳಿಸಲಾಗಿದೆ. ಗಲಾಟೆಗಳು ಆಗದಂತೆ ನಿಗಾ ವಹಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
» ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ. ಶಾಲೆ, ಕಾಲೇಜು ಅವರಣದೊಳಗೆ ಪ್ರವೇಶಿಸುವಾಗ ಗುರುತಿನ ಚೀಟಿ ಪ್ರದರ್ಶಿಸಬೇಕು.
» ವಾಹನಗಳನ್ನು ತರುವವರಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಮಾಡಲಾಗುತ್ತಿದೆ.
» ಹೊರಗಿನವರು ಶಾಲೆ, ಕಾಲೇಜು ಅವರಣವನ್ನು ಪ್ರವೇಶವನ್ನು ನಿರ್ಬಂಧಿಸಲಾಗುತ್ತಿದೆ. ಒಂದು ವೇಳೆ ಹೊರಗಿನವರು ಕ್ಯಾಂಪಸ್ ಒಳಗೆ ಬರಬೇಕಿದ್ದರೆ, ವಿಸಿಟರ್ಸ್ ಡೈರಿಯಲ್ಲಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದು ಸೆಕ್ಯೂರಿಟಿ ಸಿಬ್ಬಂದಿಗೆ ಆಡಳಿತ ಮಂಡಳಿ ಸೂಚಿಸಿದೆ.
ಶಾಲೆ, ಕಾಲೇಜು ಬಳಿ ಬಂದೋಬಸ್ತ್
ಹಿಜಾಬ್ ವಿವಾದ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ. ಅದ್ದರಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆ, ಕಾಲೇಜು ಆಡಳಿತ ಮಂಡಳಿ ಕಟ್ಟುನಿಟ್ಟು ಕ್ರಮಗಳನ್ನು ಕೈಗೊಳ್ಳುತ್ತಿವೆ. ತರಗತಿಗಳು ಪುನಾರಂಭ ಆಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ ಕೂಡ ಕೈಗೊಳ್ಳಲಾಗುತ್ತಿದೆ. ಸಿವಿಲ್ ಪೊಲೀಸರ ಜೊತೆಗೆ ಮೀಸಲು ಪೊಲೀಸ್ ಪಡೆಯನ್ನು ಕೂಡ ನಿಯೋಜಿಸಲಾಗಿದೆ.