ಶಿವಮೊಗ್ಗ ಲೈವ್.ಕಾಂ | SHIMOGA | 20 ಫೆಬ್ರವರಿ 2020
ಗ್ಯಾಸ್ ಸಿಲಿಂಡರ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಕೇಂದ್ರ, ರಾಜ್ಯ, ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಗ್ಯಾಸ್ ಸಿಲಿಂಡರ್’ಗಳನ್ನ ಸರ್ಕಲ್ ಮದ್ಯದಲ್ಲಿರಿಸಿ, ಆಕ್ರೋಶ ವ್ಯಕ್ತಪಡಿಸಲಾಯಿತು.
ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರ ನೇತೃತ್ವದಲ್ಲಿ ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವೇನು?
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ 400 ರೂ. ಇದ್ದ ಅಡುಗೆ ಅನಿಲ ಸಿಲಿಂಡರ್ ಬೆಲೆ, ಇಗ 800 ರೂ. ಏರಿಕೆಯಾಗಿದೆ. ಪೆಟ್ರೋಲ್ ಬೆಲೆ 80 ರೂ. ಡಿಸೇಲ್ ಬೆಲೆ 73 ರೂ. ಆಗಿದೆ. ರೈಲ್ವೆ ಪ್ರಯಾಣ ದರ ಶೇ.70ರಷ್ಟು ಏರಿಕೆಯಾಗಿದೆ.
ಪ್ಲಾಟ್’ಫಾರಂ ಟಿಕೆಟ್ ಬೆಲೆ 20 ರೂ.ಗೆ ಹೆಚ್ಚಳವಾಗಿದೆ. ಈ ನಡುವೆ ರೈಲ್ವೆ, ಏರ್ ಇಂಡಿಯಾ, BSNL ಸೇರಿದಂತೆ ಹಲವು ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ. ಮತ್ತೊಂದೆಡೆ ಪ್ರವಾಹ ಪರಿಹಾರ ನೀಡದೆ ಪ್ರಧಾನಿ ಮೋದಿ ಅವರು ವಿದೇಶಿ ಪ್ರವಾಸ ಮಾಡುತ್ತ, ವಿದೇಶಿ ಅತಿಥಿಗಳನ್ನು ದೇಶಕ್ಕೆ ಆಹ್ವಾನಿ ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಿದ್ದಾರೆ ಎಂದು ಕಾಂಗ್ರೆಸಿಗರು ಆರೋಪಿಸಿದರು.
ರಾಜ್ಯ ಬಿಜೆಪಿಯಿಂದ ಅನ್ಯಾಯ
ರಾಜ್ಯದಲ್ಲಿಯು ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಪ್ರತಿಭಟನಾನಿರತ ಕಾಂಗ್ರೆಸಿಗರು, ನೆರೆ ಹಾವಳಿಯಿಂದ ಮನೆ, ಜಮೀನು ಕಳೆದುಕೊಂಡವರಿಗೆ ಪರಿಹಾರ ವಿಳಂಬ, ಸಾಲ ಮನ್ನಾದ ಬದಲು ಸುಸ್ತಿ ಬಡ್ಡಿ ಮನ್ನಾ ಮಾಡುವ ಬೋಗಸ್ ತಂತ್ರ ಅನುಸರಿಸುತ್ತಿರುವುದು, ಇಂದಿರಾ ಕ್ಯಾಂಟೀನ್ ಮುಚ್ಚುವ ಷಡ್ಯಂತ್ರ, ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಪ್ರಮಾಣ ಕಡಿತಗೊಳಿಸಿರುವುದು, ವಿದ್ಯಾರ್ಥಿಗಳಿಗೆ ಲ್ಯಾಪ್’ಟಾಪ್ ವಿತರಣೆ ಮಾಡದಿರುವುದು ಸೇರಿದಂತೆ ಹಲವು ವಿಚಾರದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲೂ ಬಿಜೆಪಿ ವಿಫಲ
ಮತ್ತೊಂದೆಡೆ ಜಿಲ್ಲೆಯಲ್ಲೂ ಬಿಜೆಪಿ ವಿಫಲವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು. ಜಿಲ್ಲೆಯಲ್ಲಿ ಮರಳು ಸಮಸ್ಯೆ ಪರಿಹಾರ ಕಂಡಿಲ್ಲ. ಗಾಂಜಾ ಮಾಫಿಯಾ, ಕೊಲೆ ಬೆದರಿಕೆ, ಕಳ್ಳತನ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಮಂಗನ ಕಾಯಿಲೆ ಹತೋಟಿಗೆ ತರುವಲ್ಲಿ ಸರ್ಕಾರ ವಿಫಲವಾಗಿದೆ ಸೇರಿದಂತೆ ಹಲವು ಸಮಸ್ಯೆಗಳನ್ನು ಜಿಲ್ಲೆಯಲ್ಲಿ ಬಗೆಹರಿಸಿಲ್ಲ ಎಂದು ಆರೋಪಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]