ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಆಗಸ್ಟ್ 2020
ಕಾಂಗ್ರೆಸ್ನಲ್ಲಿ ನಾಯಕತ್ವ ಇಲ್ಲ. ಅದು ಮುಳುಗುವ ಹಡಗು ಆಗಿದೆ ಅಂತಾ ಸಚಿವ ಕೆ.ಎಸ್.ಈಶ್ವರಪ್ಪ ನೀಡಿದ್ದ ಹೇಳಿಕೆಗೆ ಜಿಲ್ಲಾ ಕಾಂಗ್ರೆಸ್ ತಿರುಗೇಟು ನೀಡಿದೆ. ಯಡಿಯೂರಪ್ಪ ಅವರು ಕೆಜೆಪಿಯಿಂದ ಬಿಜೆಪಿಗೆ ಬಾರದೆ ಹೋಗಿದ್ದರೆ ಬಿಜೆಪಿಯಲ್ಲಿ ನಾಯಕತ್ವ ಇರುತ್ತಿತ್ತಾ ಅಂತಾ ಪ್ರಶ್ನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ 40ಕ್ಕಿಂತಲೂ ಹೆಚ್ಚು ಸೀಟ್ ಗಳಿಸಲಿ ಎಂದು ಸವಾಲು ಹಾಕಿದರು.
ದೇಶದಲ್ಲಿ 60-70 ವರ್ಷ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದೆ. ನಾಯಕತ್ವ ಇಲ್ಲ ಈಶ್ವರಪ್ಪ ಅವರು ಬಾಲಿಷ ಹೇಳಿಕೆ ನೀಡಿದ್ದಾರೆ. ಬೇಕಾದ ಕೆಲಸ ಬಿಟ್ಟು, ಬೇಡದೆ ಇರುವ ಮಾತನಾಡುತ್ತಿದ್ದಾರೆ. ಇವತ್ತಿನ ಸಂದರ್ಭದಲ್ಲೂ ಬರೀ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕ್ಷೇತ್ರಗಳಿಗೆ ಸರ್ಕಾರದಿಂದ ನಿಗದಿ ಪಡಿಸಿದ ಮೀಸಲಾತಿ ಪಟ್ಟಿ ನಿಯಮ ಬಾಹಿರವಾಗಿದ್ದು, ಮೀಸಲಾತಿ ನಿಗದಿ ಪಡಿಸುವ ಪ್ರಕ್ರಿಯೆ ವೇಳೆ ರೋಸ್ಟರ್ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಸುಂದರೇಶ್ ಆರೋಪಿಸಿದರು.
ರಾಜೀವ್ಗಾಂಧಿ ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಲ್ಲ ಜಾತಿ, ಜನಾಂಗಕ್ಕೆ ನ್ಯಾಯ ಒದಗಿಸಲು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು. ಈ ವ್ಯವಸ್ಥೆಯನ್ನು ಬಿಜೆಪಿ ಸರ್ಕಾರ ಹಾಳು ಮಾಡುತ್ತಿದೆ. ಈಗ ಪ್ರಕಟಿಸಿರುವ ಮೀಸಲಾತಿ ಪಟ್ಟಿ ವಿರುದ್ದ ಕಾಂಗ್ರೆಸ್ ಪಕ್ಷದ ನಾಯಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕೂಡಲೇ ಸರ್ಕಾರ ಈಗ ಪ್ರಕಟಿಸಿರುವ ಮೀಸಲಾತಿ ಪಟ್ಟಿಯನ್ನು ಪುನರ್ ಪರಿಶೀಲಿಸಿ ನೂತನ ಪಟ್ಟಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿ.ಪಂ. ಸದಸ್ಯ ಕಲಗೋಡು ರತ್ನಾಕರ್, ಮುಖಂಡರಾದ ಡಾ.ಶ್ರೀನಿವಾಸ್, ಸಿ.ಎಸ್. ಚಂದ್ರಭೂಪಾಲ್, ಚಂದನ್, ಚಂದ್ರಶೇಖರ್, ಬಾಬು, ಪ್ರಭಾಕರ ಗೌಡ ಇನ್ನಿತರರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]