ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020
ಸ್ಮಾರ್ಟ್ ಸಿಟಿ ಯೋಜನೆಯ ವ್ಯಾಪ್ತಿಗೆ ಒಳಪಡದ ವಾರ್ಡ್ಗಳ ಕಾರ್ಪೊರೇಟರ್ಗಳನ್ನು ಸಲಹಾ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿಕೊಂಡಿರುವುದಕ್ಕೆ, ಮಹಾನಗರ ಪಾಲಿಕೆಯ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ವಿರೋಧಿಸಿದ್ದಾರೆ. ಈ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
35 ವಾರ್ಡ್ಗಳ ಪೈಕಿ 11 ವಾರ್ಡ್ಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಐದು ಮಂದಿ ಸಲಹಾ ಸಮಿತಿಯನ್ನು ರಚಿಸಲಾಗಿದೆ. ಆದರೆ ಶಿವಮೊಗ್ಗದಲ್ಲಿ ರಚಿಸಲಾಗಿರುವ ಸಲಹಾ ಸಮಿತಿಯಲ್ಲಿರುವ ಐವರು ಕಾರ್ಪೊರೇಟರ್ಗಳ ವಾರ್ಡ್ನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿಲ್ಲ. ಅವರಿಗೆ ಯೋಜನೆ ಕುರಿತು ಮಾಹಿತಿಯೂ ಇರುವುದಿಲ್ಲ.
ಇಂತಹ ಪರಿಸ್ಥಿತಿಯಲ್ಲಿ ಸಲಹಾ ಸಮಿತಿಯಲ್ಲಿರುವವರು ಸ್ಮಾರ್ಟ್ ಸಿಟಿ ಯೋಜನೆ ಕುರಿತು ಏನೇನು ಚರ್ಚೆ ನಡೆಸುವುದಿಲ್ಲ. ಆದ್ದರಿಂದ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ನಡೆಯುತ್ತಿರುವ ವಾರ್ಡ್ನ ಕಾರ್ಪೊರೇಟರ್ಗಳನ್ನು ಈ ಸಲಹಾ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು ಎಂದು ಕಾರ್ಪೊರೇಟರ್ಗಳು ಒತ್ತಾಯಿಸಿದರು.
ಕಾರ್ಪೊರೇಟರ್ಗಳ ಮನವಿಗೆ ಸ್ಪಂದಿಸಿದ ಸಂಸದ ಬಿ.ವೈ.ರಾಘವೇಂದ್ರ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಠಾರೆ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಕಾರ್ಪೊರೇಟರ್ಗಳಾದ ನಾಗರಾಜ ಕಂಕಾರಿ, ಯಮುನಾ ರಂಗೇಗೌಡ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]