ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 FEBRUARY 2021
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಭದ್ರಾವತಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಶಾಸಕ ಸಂಗಮೇಶ್ವರ್ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.
ಭದ್ರಾವತಿ ಮುಖ್ಯ ಬಸ್ ನಿಲ್ದಾಣದ ಬಳಿ ಇರುವ ಡಾ.ಅಂಬೇಡ್ಕರ್ ಅವರ ಪ್ರತಿಮೆ ಬಳಿಯಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಶಾಸಕ ಸಂಗಮೇಶ್ವರ್ ಅವರು ಡಾ.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ, ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಜಾತಿ, ಧರ್ಮ, ಹಣದ ರಾಜಕೀಯ
ತಾಲೂಕು ಕಚೇರಿ ಬಳಿ ಪ್ರತಿಭಟನಾ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ರೈತರು, ಕಾರ್ಮಿಕರು, ಮಧ್ಯಮ ವರ್ಗದವರು, ಬಡವರು ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ಬಿಜೆಪಿಯ ದುರಾಡಳಿತಕ್ಕೆ ಸಾಕ್ಷಿಯಾಗಿದೆ. ಇನ್ನು, ವಿಐಎಸ್ಎಲ್, ಎಂಪಿಎಂ ಖಾಸಗೀಕರಣ ಮಾಡಿ, ಬಿಜೆಪಿಯಲ್ಲಿರುವ ಶ್ರೀಮಂತರು ಖರೀದಿಸುವ ತಯಾರಿಯಲ್ಲಿದ್ದಾರೆ. ಬಿಜೆಪಿಯದ್ದು ಜಾತಿ, ಧರ್ಮ, ಹಣದ ರಾಜಕೀಯ. ಇದು ಹೆಚ್ಚು ದಿನ ಉಳಿಯೋದಿಲ್ಲ. ಈಗಾಗಲೇ ಪಂಜಾಬ್, ಆಂಧ್ರದಲ್ಲಿ ಬಿಜೆಪಿ ಕಳೆದು ಹೋಗಿದೆ ಎಂದು ಆರೋಪಿಸಿದರು.
ಶಾಸಕ ಬಿ.ಕೆ.ಸಂಗಮೇಶ್ವರ್ ಮಾತನಾಡಿ, ಕೊನೆ ಉಸಿರು ಇರುವ ತನಕ ಕ್ಷೇತ್ರ ಜನರ ಕಷ್ಟಕ್ಕೆ ಸ್ಪಂದಿಸುತ್ತೇನೆ. ಮುಂದಿನ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಸಭೆ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ.ಚಂದ್ರೇಗೌಡ, ಗ್ರಾಮಾಂತರ ಅಧ್ಯಕ್ಷ ಹೆಚ್.ಎಲ್.ಷಡಾಕ್ಷರಿ, ಮಹಮ್ಮದ್ ಸನಾಉಲ್ಲಾ, ಬಾಲಕೃಷ್ಣ, ಬಿ.ಕೆ.ಮೋಹನ್, ಸಿ.ಎಂ.ಖಾದರ್, ಅಮೀರ್ ಜಾನ್, ಗಣೇಶ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]