ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020
ಜಿಲ್ಲೆಯಲ್ಲಿ ಸಂಘಟನೆ ಗಟ್ಟಿಗೊಳಿಸಲು ಶಿವಮೊಗ್ಗ ಕಾಂಗ್ರೆಸ್ ಮುಂದಡಿ ಇಟ್ಟಿದೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ಒಬ್ಬರು ಉಸ್ತುವಾರಿಯನ್ನು ನೇಮಕ ಮಾಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಹೇಳಿಕೆ ನೀಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಖಾನ್, ಸಾಗರ ಕ್ಷೇತ್ರಕ್ಕೆ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕಲಗೋಡು ರತ್ನಾಕರ್, ತೀರ್ಥಹಳ್ಳಿ ಕ್ಷೇತ್ರಕ್ಕೆ ವಿಧಾನಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್, ಶಿವಮೊಗ್ಗ ನಗರ ಕ್ಷೇತ್ರಕ್ಕೆ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಲ್ಕಿಷ್ ಬಾನು, ಶಿಕಾರಿಪುರ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುಕ್ತಿಯಾರ್ ಅಹಮದ್, ಸೊರಬ ಕ್ಷೇತ್ರಕ್ಕೆ ವಿಧಾನಪರಿಷತ್ ಮಾಜಿ ಸದಸ್ಯ ಶಾಂತವೀರಪ್ಪ ಗೌಡ ಅವರನ್ನು ನೇಮಿಸಿದ್ದಾರೆ.
ಆರ್ಥಿಕ ದಿವಾಳಿಯತ್ತ ಕೇಂದ್ರ ಸರ್ಕಾರ
ಇನ್ನು ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೆಚ್.ಎಸ್.ಸುಂದರೇಶ್, ಕೇಂದ್ರ ಸರ್ಕಾರ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಬ್ಯಾಂಕು, ಸಹಕಾರಿ ವ್ಯವಸ್ಥೆ, ಸಾರ್ವಜನಿಕ ವಲಯವನ್ನು ಹುಟ್ಟುಹಾಕಿತು. ಈಗ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಎಲ್ಲ ಉದ್ಯಮಗಳನ್ನು ಹಾಳುಗೆಡವುತ್ತಿದೆ. ಜಿಎಸ್’ಟಿ ತೆರಿಗೆಯಲ್ಲಿ ರಾಜ್ಯದ ಪಾಲು 1.47 ಕೋಟಿ ರೂ. ಇನ್ನೂ ಬಂದಿಲ್ಲ ಎಂದು ಟೀಕಿಸಿದರು.
ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಯೋಗೇಶ್, ಕಾರ್ಪೊರೇಟರ್ ಯಮುನಾ ರಂಗೇಗೌಡ, ಪ್ರಮುಖರಾದ ವಿಶ್ವನಾಥ ಕಾಶಿ, ಚಂದ್ರಭೂಪಾಲ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]