ಶಿವಮೊಗ್ಗ ಲೈವ್.ಕಾಂ | SHIMOGA NEWS | 5 APRIL 2021
ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರ ಕಾಪಾಡುತ್ತಿಲ್ಲ ಎಂದು ಜನರು, ವ್ಯಾಪಾರಿಗಳ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು, ಪೊಲೀಸರು ದಂಡ ಹಾಕುತ್ತಿದ್ದಾರೆ. ಆದರೆ ಸರ್ಕಾರದ ಕಾರ್ಯಕ್ರಮವೊಂದರಲ್ಲೇ ಕೋವಿಡ್ ನಿಯಮ ಉಲ್ಲಂಘನೆಯಾದರೂ ಕ್ಯಾರೆ ಅನ್ನದೆ ಕೈ ಕಟ್ಟಿ ಕುಳಿತಿದ್ದಾರೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಶಿವಮೊಗ್ಗದ ಮಿಳಘಟ್ಟ ಮತ್ತು ಗೋವಿಂದಾಪುರ ಬಡಾವಣೆಯಲ್ಲಿ ಆಶ್ರಯ ಸಮಿತಿ ಮತ್ತು ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾಗಿರುವ ಮಾದರಿ ಮನೆಗಳ ವೀಕ್ಷಣೆ ಕಾರ್ಯಕ್ರಮ ನಡೆಯಿತು. ಸಚಿವ ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಗನ್ನಿ ಶಂಕರ್ ಸೇರಿದಂತೆ ಹಲವು ಜನಪ್ರತಿನಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.
ಕೋವಿಡ್ ನಿಯಮಕ್ಕೆ ಕ್ಯಾರೆ ಅನ್ನಲಿಲ್ಲ
ದೊಡ್ಡ ಸಂಖ್ಯೆಯ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆಯಿಸಲಾಗಿತ್ತು. ಬಹುತೇಕರು ಮಾಸ್ಕ್ ಧರಿಸಿದ್ದರೂ, ಅದು ಕೊರಳಲ್ಲಿತ್ತು. ಸಾಮಾಜಿಕ ಅಂತರವಿಲ್ಲದೆ ಫಲಾನುಭವಿಗಳಿಗೆ ಕುರ್ಚಿ ವ್ಯವಸ್ಥೆ ಮಾಡಲಾಗಿತ್ತು. ವೇದಿಕೆ ಮೇಲಿದ್ದವರಲ್ಲೂ ಹಲವರು ಮಾಸ್ಕ್ ಧರಿಸಿರಲಿಲ್ಲ. ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಅಧಿಕಾರಿಗಳೆ ಕಾರ್ಯಕ್ರಮ ಆಯೋಜಿಸಿದ್ದರು.
ದಂಡ ಹಾಕುವವರಾರೂ ಇರಲಿಲ್ಲ..!
ಜಿಲ್ಲೆಯಲ್ಲಿ ದಿನೇ ದಿನೇ ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಮಾರ್ಗಸೂಚಿಗಳ ವಿರೋಧಿಸಿ ಕಾರ್ಯಕ್ರಮ ನಡೆಸದಂತೆ ಜಿಲ್ಲಾಧಿಕಾರಿ ಶಿವಕುಮಾರ್ ಅವರು ಎಚ್ಚರಿಸಿದ್ದರು. ಈಗ ಸರ್ಕಾರಿ ಕಾರ್ಯಕ್ರಮದಲ್ಲೇ ನಿಯಮ ಉಲ್ಲಂಘನೆಯಾಗಿದ್ದು, ದಂಡ ಹಾಕಬೇಕಿದ್ದವರು ಮೌನಕ್ಕ ಜಾರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]