ಶಿವಮೊಗ್ಗ: ನಗರದ ಅನುಪಿನಕಟ್ಟೆ ರಿಂಗ್ ರಸ್ತೆ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಮಂಗಳವಾರ ಮಧ್ಯಾಹ್ನ ಘಟನೆ ಸಂಭವಿಸಿದೆ. ಚಾಲಕ ಮಣಿ ಎಂಬಾತ 407 ಲಾರಿಯನ್ನು ಅತಿವೇಗವಾಗಿ ಚಲಾಯಿಸಿಕೊಂಡು ಬಂದಿದ್ದಾರೆ. ಈ ವೇಳೆ ಅನುಪಿನಕಟ್ಟೆ ರಿಂಗ್ ರಸ್ತೆಯ ತಿರುವಿನಲ್ಲಿ ಲಾರಿ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ರಾಮಾನಾಯ್ಕ ಅವರ ತಲೆ ಹಾಗೂ ಮೈಕೈಗೆ ಗಂಭೀರ ಪೆಟ್ಟು ಬಿದ್ದು ರಕ್ತಸ್ರಾವವಾಗಿತ್ತು ಎಂದು ಆರೋಪಿಸಲಾಗಿದೆ.

ಲಾರಿಯಲ್ಲಿದ್ದ ಇತರೆ ಕಾರ್ಮಿಕರಾದ ಯಶವಂತ, ಚಂದ್ರಶೇಖರ ಮತ್ತು ಕಿರಣ್ ಎಂಬುವವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದವು. ರಸ್ತೆಯಲ್ಲಿ ಹೋಗುತ್ತಿದ್ದವರು ಕೂಡಲೇ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ರಾಮಾನಾಯ್ಕ ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


