ಶಿವಮೊಗ್ಗ: ನಗರದ ಹೊನ್ನಾಳಿ ರಸ್ತೆಯ ರಾಗಿಗುಡ್ಡ ಕ್ರಾಸ್ ಬಳಿ ಬೈಕ್ ಸವಾರನಿಗೆ ಚಾಕು ತೋರಿಸಿ ಹೆದರಿಸಿ ದರೋಡೆ ಮಾಡಿದ್ದ ಪ್ರಕರಣದ ಆರೋಪಿಗೆ ಶಿವಮೊಗ್ಗದ ನ್ಯಾಯಾಲಯವು 7 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ಆದೇಶ ಪ್ರಕಟಿಸಿದೆ. ➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಅಡ್ಡಗಟ್ಟಿ ಚಾಕು ತೋರಿಸಿ ದರೋಡೆ
ಮೊಹಮ್ಮದ್ ನೂರುಲ್ಲಾ ಅಲಿಯಾಸ್ ಇಂಗ್ಲೀಷ್ ಶಿಕ್ಷೆಗೊಳಗಾದ ಅಪರಾಧಿ. 2021ರ ಮೇ 4ರಂದು ಬೆಳಗಿನ ಜಾವ ಸುನೀಲ್ (26) ಎಂಬುವವರು ತಮ್ಮ ಬೈಕಲ್ನಲ್ಲಿ ಹೊನ್ನಾಳಿ ರಸ್ತೆಯ ರಾಗಿಗುಡ್ಡ ಕ್ರಾಸ್ ಹತ್ತಿರ ಹೋಗುತ್ತಿದ್ದಾಗ, ಮತ್ತೊಂದು ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಅವರನ್ನು ಅಡ್ಡಗಟ್ಟಿದ್ದರು. ಚಾಕು ತೋರಿಸಿ ಬೆದರಿಸಿ ಸುನೀಲ್ ಅವರ ಬಳಿಯಿದ್ದ ₹500 ನಗದು, ಮೊಬೈಲ್ ಹಾಗೂ ಎಟಿಎಂ ಕಾರ್ಡ್ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು.

ಆರೋಪ ಸಾಬೀತು, ಶಿಕ್ಷೆ ಪ್ರಕಟ
ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ಸಂಜೀವ್ ಕುಮಾರ್ ಅವರು ಪ್ರಕರಣದ ತನಿಖೆ ನಡೆಸಿ, ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲ ಅವರು ಈ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಮಮತಾ ಬಿ.ಎಸ್. ಅವರು ವಾದ ಮಂಡಿಸಿದ್ದರು.
