ಶಿವಮೊಗ್ಗ: ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಯುವಕನಿಗೆ ವಾಹನ ಡಿಕ್ಕಿ (hit-and-run) ಹೊಡೆದ ಪರಿಣಾಮ, ತೀವ್ರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.
ಶಿವಮೊಗ್ಗ ತಾಲೂಕಿನ ಕೊನಗವಳ್ಳಿ ಗ್ರಾಮದ ನಿವಾಸಿ ಪ್ರಶಾಂತ್ (28) ಮೃತ ದುರ್ದೈವಿ. ಕೂಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಎಂದಿನಂತೆ ಮಾರ್ಚ್ 13 ರಂದು ಶಿವಮೊಗ್ಗದಲ್ಲಿ ಕೆಲಸ ಮುಗಿಸಿ ರಾತ್ರಿ 8:30ರ ಸುಮಾರಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಊರಿಗೆ ಹಿಂದಿರುಗುತ್ತಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು
ಗೇಜ್ಜೆನಹಳ್ಳಿ ಗ್ರಾಮದ ಹೆಚ್.ಪಿ ಪೆಟ್ರೋಲ್ ಬಂಕ್ ಹತ್ತಿರ ಬರುತ್ತಿದ್ದಂತೆ, ವಾಹನವೊಂದು ಪ್ರಶಾಂತ್ ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತವೆಸಗಿದ ವಾಹನ ಸ್ಥಳದಿಂದ ಪರಾರಿಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಚಿಕಿತ್ಸೆ ಫಲಕಾರಿಯಾಗದ ಸಾವು
ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಶಾಂತ್ ಅವರನ್ನು ಸ್ಥಳೀಯರು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ನ್ಯೂರೋ ಭಾರತ್ ಹಾಗೂ ಮಣಿಪಾಲದ ಕಸ್ತೂರ್ ಬಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಾರ್ಚ್ 14ರಂದು ಪ್ರಶಾಂತ್ ಮರಣ ಹೊಂದಿದ್ದಾರೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








