SHIVAMOGGA LIVE NEWS | 11 JANUARY 2023
ತೀರ್ಥಹಳ್ಳಿ : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (blast case) ಪ್ರಕರಣದ ಆರೋಪಿ ಶಾರೀಕ್ ಮನೆ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇಂದು ಬೆಳಗ್ಗೆ ದಾಳಿ ನಡೆಸಿದ ಅಧಿಕಾರಿಗಳ, ದಾಖಲೆಗಳ ಪರಿಶೀಲಿಸಿದರು.
ತೀರ್ಥಹಳ್ಳಿ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳಗ್ಗೆ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಶಾರೀಕ್ ಕುಟುಂಬದ ಹಣಕಾಸು ವ್ಯವಹಾರ ಕುರಿತು ಪರಿಶೀಲನೆ ನಡೆಸಲಾಯಿತು.
ಮನೆ ಬಳಿ ಭದ್ರತೆ
ಶಾರೀಕ್ ಮನೆಯಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದರು. ವ್ಯವಹಾರಗಳು ಕುರಿತು ಮನೆಯವರಿಂದ ಮಾಹಿತಿ ಪಡೆದರು ಎಂದು ತಿಳಿದು ಬಂದಿದೆ. ಇನ್ನು, ಜಾರಿ ನಿರ್ದೇಶನಾಲಯ ಅಧಿಕಾರಿಗಳ ದಾಳಿ ಹಿನ್ನೆಲೆ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಬಳಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಕಾಂಗ್ರೆಸ್ ಕಚೇರಿಗು ಭೇಟಿ
ಇದೆ ವೇಳೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಹಳೆ ಕಚೇರಿ ವಿಷಯ ಸಂಬಂಧ ಪಕ್ಷದ ಮುಖಂಡರನ್ನು ಪ್ರಶ್ನಿಸಿ, ದಾಖಲೆಗಳನ್ನು ಪರಿಶೀಲಿಸಿದರು. ಶಾರೀಕ್ ತಂದೆಯ ಹೆಸರಿನಲ್ಲಿದ್ದ ಜಾಗವನ್ನು ಗುತ್ತಿಗೆಗೆ ಪಡೆದು ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ಕಚೇರಿ ಸ್ಥಾಪಿಸಲಾಗಿತ್ತು. ನೂತನ ಕಚೇರಿ ಸ್ಥಾಪನೆಯಾದ ಬಳಿಕ ಜಾಗ ತೆರವು ಮಾಡಿಕೊಡಲಾಗಿತ್ತು ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿದ್ದ ಕೇಸ್ ಗೆ ಬಿಗ್ ಟ್ವಿಸ್ಟ್
ಶಾರೀಕ್ ತಂದೆ ಮುಂಗಡ ಹಣ ಹಿಂತಿರುಗಿಸುವುದು ಬಾಕಿ ಇತ್ತು ಎಂದು ಹೇಳಲಾಗುತ್ತಿದೆ. ಈ ವಿಚಾರವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಸ್ಪೋಟ ಪ್ರಕರಣದಲ್ಲಿ ಇ.ಡಿ ಎಂಟ್ರಿ ಏಕೆ?
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ (blast case) ತನಿಖೆ ವೇಳೆ ಶಾರೀಕ್ ಹಣಕಾಸು ವ್ಯವಹಾರದ ಕುರಿತು ತನಿಖೆ ನಡೆಸಲಾಗಿತ್ತು. ಈ ವೇಳೆ ಕ್ರಿಪ್ಟೋ ಕರೆನ್ಸಿ ಮೂಲಕ ಹಣಕಾಸು ವರ್ಗಾವಣೆ ಆಗಿರುವುದು ಗೊತ್ತಾಗಿತ್ತು. ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ಕೈಗೊಂಡಿದೆ. ಇದೆ ಕಾರಣಕ್ಕೆ ಶಾರೀಕ್ ಕುಟುಂಬದವರ ಹಣಕಾಸು ವ್ಯವಹಾರಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.