SHIVAMOGGA LIVE NEWS | 15 APRIL 2024
ELECTION NEWS : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಇವತ್ತು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ಬಿ.ಫಾರಂಗೆ ಪೂಜೆ ಸಲ್ಲಿಸಿದರು. ಅಲ್ಲದೆ, ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಸಕ್ರೆಬೈಲು, ಸಿಗಂದೂರಿಗೆ ಭೇಟಿ
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಪತಿ ಶಿವರಾಜ್ ಕುಮಾರ್ ಮತ್ತು ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಭಾನುವಾರ ಸಕ್ರೆಬೈಲು ಆನೆ ಬಿಡಾರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಆನೆ ಸವಾರಿ, ತುಂಗಾ ಹಿನ್ನೀರಿನಲ್ಲಿ ಬೋಟಿಂಗ್ ಮಾಡಿದರು. ಬಳಿಕ ಸಿಗಂದೂರಿಗೆ ತೆರಳಿ ಅವರು ಅಲ್ಲಿ ಶ್ರೀ ಚೌಡೇಶ್ವರಿ ದೇವಿ ಸನ್ನಿಧಿಯಲ್ಲಿ ಬಿ.ಫಾರಂಗೆ ಪೂಜೆ ಸಲ್ಲಿಸಿದರು.
ಕಾಗೋಡು ಆಶೀರ್ವಾದ ಪಡೆದ ಅಭ್ಯರ್ಥಿ
ಸಾಗರದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಇವತ್ತು ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ ಕುಮಾರ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆ ಬೆಳಗ್ಗೆ 10.30ಕ್ಕೆ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಮೆರವಣಿಗೆ ನಡೆಸಲಾಗುತ್ತದೆ. ‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಮಧು ಬಂಗಾರಪ್ಪ ಸೇರಿದಂತೆ ಜಿಲ್ಲೆಯ ಮುಖಂಡರು, 45 ಸಾವಿರ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಗೋಪಿ ವೃತ್ತದಲ್ಲಿ ಬಹಿರಂಗ ಸಭೆ ನಡೆಸಲಾಗುತ್ತದೆ’ ಎಂದು ಗೀತಾ ಶಿವರಾಜ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗಿನ ಜಾವ ಪೊಲೀಸರ ದಾಳಿ, ಮನೆಗಳಲ್ಲಿ ಶೋಧ, ಕಾರಣವೇನು? ಎಲ್ಲೆಲ್ಲಿ ನಡೆಯಿತು ದಾಳಿ?