ಶಿವಮೊಗ್ಗ ಲೈವ್.ಕಾಂ | SHIMOGA NEWS | 05 MARCH 2021
ಶಿವಮೊಗ್ಗದ ಗಾಯಕ ವೇಣುಗೋಪಾಲ್ ಅವರಿಗೆ ಜಿಎಸ್ಎಸ್ ಪುರಸ್ಕಾರ ನೀಡಲಾಗುತ್ತಿದೆ ಎಂದು ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷೆ ಪ್ರೊ.ಕಿರಣ್ ದೇಸಾಯಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷದಿಂದ ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವವರನ್ನು ಗುರುತಿಸಿ ಡಾ. ಜಿ.ಎಸ್.ಎಸ್.ಪುರಸ್ಕಾರ ನೀಡಲಾಗುತ್ತಿದೆ. ಸಂಗೀತ ಕ್ಷೇತ್ರದಲ್ಲಿ ಅವರ ಕೊಡುಗೆ ಗುರುತಿಸಿ ಈ ಬಾರಿ ವೇಣುಗೋಪಾಲ್ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.
ಮಾರ್ಚ್ 7ರಂದು ಸಂಜೆ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿರಲಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕುವೆಂಪು ವಿವಿಯ ಪ್ರಾಧ್ಯಾಪಕ ಡಾ. ಸಿದ್ದೇಶ್ ನಲ್ಲಿಕಟ್ಟೆ ಅವರು ‘ಜಾಗತಿಕ ತಲ್ಲಣಗಳು, ಜಿಎಸ್ಎಸ್ ಕಾವ್ಯದ ಪ್ರಸ್ತುತತೆ’ ಕುರಿತು ಉಪನ್ಯಾಸ ಇರಲಿದೆ. ಕಾವ್ಯ ಸೌರಭ ಸಂಗೀತ ಕಾರ್ಯಕ್ರಮ ನಡೆಯಲಿದೆ.