ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020
ವನ್ಯಸಂಪತ್ತಿನ ರಕ್ಷಣೆ ಕಾರ್ಯದಲ್ಲಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅರಣ್ಯ ಇಲಾಖೆ ಹುತಾತ್ಮರ ಬಲಿದಾನ ಇನ್ನಷ್ಟು ಆತ್ಮಸಮರ್ಪಣೆಯಿಂದ ಕರ್ತವ್ಯ ನಿರ್ವಹಿಸಲು ನಮಗೆಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.
ಶ್ರೀಗಂಧ ಕೋಠಿ ಆವರಣದಲ್ಲಿ ವಿಶ್ವ ಹುತಾತ್ಮ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹುತಾತ್ಮ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ಸಮರ್ಪಿಸಿ ಮಾತನಾಡಿದರು.
ವನ್ಯಜೀವಿ, ಮರಗಳು ಹಾಗೂ ಅರಣ್ಯ ಸಂರಕ್ಷಣೆ ಕಾರ್ಯದಲ್ಲಿ ತೊಡಗುವ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಅತ್ಯಂತ ಕಷ್ಟಕರವಾದ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಇವರ ಪರಿಶ್ರಮದಿಂದಾಗಿಯೇ ಕಾಡು ಇಂದಿಗೂ ಈ ಸ್ವರೂಪದಲ್ಲಿ ಉಳಿದಿದೆ. ಅರಣ್ಯ ಸಂರಕ್ಷಣೆ ಕಾರ್ಯದಲ್ಲಿ ಅರಣ್ಯ ಇಲಾಖೆಯೊಂದಿಗೆ ಎಲ್ಲರೂ ಸಹಕರಿಸುವ ಅಗತ್ಯವಿದೆ ಎಂದು ಹೇಳಿದರು.
ಕರ್ತವ್ಯದ ವೇಳೆ ಮೃತಪಟ್ಟ ಹುತಾತ್ಮರ ಕುಟುಂಬದ ಜತೆ ನಾವೆಲ್ಲರೂ ಇದ್ದೇವೆ. ಅವರ ಕಷ್ಟಸುಖದಲ್ಲಿ ಸರ್ಕಾರ ಕೈ ಜೋಡಿಸಿ ಸ್ಪಂದಿಸುತ್ತದೆ. ಹುತಾತ್ಮರಾದವರ ನೆನಪು ಸದಾ ಜೀವಂತವಾಗಿರುವುದು. ಸರ್ಕಾರಿ ನೌಕರರು ಶೇಕಡಾ ನೂರರಷ್ಟು ಅರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುವುದೇ, ಸೇವೆಯಲ್ಲಿರುವಾಗ ಹುತಾತ್ಮರಾಗುವವರಿಗೆ ನೀಡುವ ನಿಜವಾದ ಗೌರವ ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಯು.ಶಂಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜಿಲ್ಲಾ ಪೊಲೀಸ್ ಬ್ಯಾಂಡ್ ತಂಡದಿಂದ ಹುತಾತ್ಮರಿಗೆ ಗೌರವ ಸಮರ್ಪಣೆ ಹಾಗೂ ಪೊಲೀಸ್ ತಂಡದಿಂದ ಕುಶಾಲು ತೋಪು ಹಾರಿಸಿ ಗೌರವ ಸಲ್ಲಿಸಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]