ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಅಕ್ಟೋಬರ್ 2021
ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ಸಲುವಾಗಿ ಜಿಲ್ಲೆಯಾದ್ಯಂತ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಯಿತು. ಸುಮಾರು 15 ಸ್ಥಳಗಳಲ್ಲಿ ಹನ್ನೊಂದು ಸಾವಿರಕ್ಕೂ ಹೆಚ್ಚು ಜನರು ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಎಲ್ಲೆಲ್ಲಿ ಹೇಗಿತ್ತು ಗೀತ ಗಾಯನ?
ಜಿಲ್ಲಾಧಿಕಾರಿ ಕಚೇರಿ : ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ತಹಶೀಲ್ದಾರ್ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಉಮೇಶ್ ಸೇರಿದಂತೆ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಗೀತ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸಿಟಿ ಸೆಂಟರ್ ಮಾಲ್ : ಮಹಾನಗರ ಪಾಲಿಕೆ ವತಿಯಿಂದ ಬ್ಯಾರಿಸ್ ಸಿಟಿ ಸೆಂಟರ್ ಮಾಲ್’ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಕಮಿಷನರ್ ಚಿದಾನಂದ ವಟಾರೆ ಸೇರಿದಂತೆ ಪಾಲಿಕೆ ಸದಸ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು.
ಜೋಗ ಜಲಪಾತ : ವಿಶ್ವವಿಖ್ಯಾತ ಜೋಗ ಜಲಪಾತದಲ್ಲೂ ಕನ್ನಡ ಡಿಂಡಿಮ ಮಾರ್ದನಿಸಿತು. 600ಕ್ಕೂ ಹೆಚ್ಚು ಮಂದಿ ಗೀತ ಗಾಯನದಲ್ಲಿ ಪಾಲ್ಗೊಂಡಿದ್ದರು. ಇದರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಶ್ವವಿಖ್ಯಾತ ಜೋಗ ಜಲಪಾತದ ಮುಂಭಾಗ ನಾಡಗೀತೆಯ ಕಲರವ. ರಾಜ್ಯದ ವಿವಿಧ ಭಾಗಗಳಲ್ಲಿ “ಕನ್ನಡಕ್ಕಾಗಿ ನಾವು” ಅಭಿಯಾನದ ಮುಖೇನ ಲಕ್ಷ ಲಕ್ಷ ಕಂಠಗಳ ಗಾಯನದ ಕ್ಷಣ.@CMofKarnataka @BSBommai @narendramodi pic.twitter.com/Y9qvVxpwRB
— Sunil Kumar Karkala (@karkalasunil) October 28, 2021
ಕುವೆಂಪು ವಿಶ್ವವಿದ್ಯಾಲಯ : ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್’ನಲ್ಲಿ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಹಿರೇಮಠ ಸಭಾಂಗಣದಲ್ಲಿ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ, ಕುಲಸಚವೆ ಜಿ.ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಎಂ.ತ್ಯಾಗರಾಜ ಸೇರಿದಂತೆ ಅಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಬಿದನೂರು ಕೋಟೆ : ಐತಿಹಾಸಿಕ ಬಿದನೂರು ಕೋಟೆಯಲ್ಲೂ ಕನ್ನಡದ ಕಂಪು ಬೀರಿತು. ತಾಲೂಕು ಆಡಳಿತ, ಮೂಡುಗೊಪ್ಪ ಗ್ರಾಮ ಪಂಚಾಯಿತಿ, ವ್ಯಾಸಮಹರ್ಶಿ ಗುರುಕುಲ ಸಾರಥ್ಯದಲ್ಲಿ ಗೀತ ಗಾಯ ನಡೆಯಿತು.
ಲಕ್ಷ್ಮೀನರಸಿಂಹ ಸ್ವಾಮಿ ದೇಗುಲ : ಭದ್ರಾವತಿಯ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇಗುಲದಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಿತು. ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ನಗರಸಭೆ ವತಿಯಿಂದ ಕಾರ್ಯಕ್ರಮ ನಡೆಸಲಾಯಿತು.
ತೀರ್ಥಹಳ್ಳಿಯ ರಾಮೇಶ್ವರ ದೇವಸ್ಥಾನ ಪಕ್ಕದ ತುಂಗಾ ತೀರ, ಕುಪ್ಪಳಿಯ ಕವಿಮನೆ, ಶಿವಮೊಗ್ಗದ ಶಾಹಿ ಗಾರ್ಮೆಂಟ್ಸ್, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಕಾಲೇಜು ಸೇರಿದಂತೆ ವಿವಿಧೆಡೆ ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು ಗೀತ ಗಾಯನ ಕಾರ್ಯಕ್ರಮಗಳು ನಡೆದವು.
ಸರ್ಕಾರ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಜಿಲ್ಲೆಯ 15 ಕಡೆ, 11,500ಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರಕವಿ ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮ, ಕವಿ ಕೆ.ಎಸ್.ನಿಸಾರ್ ಅಹಮದ್ ಅವರ ಜೋಗದ ಸಿರಿ ಬೆಳಕಿನಲ್ಲಿ ಕವನ, ಡಾ.ರಾಜ್ ಕುಮಾರ್ ಅಭಿನಯದ ಸಿನಿಮಾದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳನ್ನು ಹಾಡಲಾಯಿತು.