ಶಿವಮೊಗ್ಗ ಲೈವ್.ಕಾಂ | SHIMOGA NEWS | 29 NOVEMBER 2020
ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳನ್ನು ವಿಭಜಿಸಿ ಶಿವಮೊಗ್ಗ ಗ್ರಾಮಾಂತರ ತಾಲೂಕು ರಚಿಸುವಂತೆ ಒತ್ತಾಯಿಸಿ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ನೇತೃತ್ವದ ನಿಯೋಗ ಇವತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು.
ಹೆಲಿಪ್ಯಾಡ್ ಬಳಿ ಯಡಿಯೂರಪ್ಪ ಅವರನ್ನು ಭೇಟಿಯಾದ ನಿಯೋಗ, ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಜನಸಂಖ್ಯೆ ಹೆಚ್ಚಿದೆ. ತಾಲೂಕು ಕಚೇರಿ ಸೇರಿದಂತೆ ವಿವಿಧ ತಾಲೂಕು ಮಟ್ಟದ ಕಚೇರಿಗಳಲ್ಲಿ ಜನರು ತಮ್ಮ ಕೆಲಸಗಳಿಗಾಗಿ ನೂಕುನುಗ್ಗಲು ಅನುಭವಿಸುವಂತಾಗಿದೆ. ಆದ್ದರಿಂದ ಶಿವಮೊಗ್ಗ ಗ್ರಾಮಾಂತರವನ್ನು ಪ್ರತ್ಯೇಕ ತಾಲೂಕು ಮಾಡುವಂತೆ ಮನವಿ ಮಾಡಿದರು.
ರಾಜ್ಯದ ಕೆಲವು ದೊಡ್ಡ ತಾಲೂಕುಗಳನ್ನು ವಿಭಜಿಸಿ ನಗರ ಮತ್ತು ಗ್ರಾಮೀಣ ತಾಲೂಕು ಮಾಡಲಾಗಿದೆ. ಅದೆ ಮಾದರಿಯಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ ಕೆಲವು ಭಾಗವನ್ನು ವಿಭಜಿಸಿ ಶಿವಮೊಗ್ಗ ಗ್ರಾಮಾಂತರ ತಾಲೂಕು ರಚಿಸುವಂತೆ ಮನವಿ ಮಾಡಿದರು.
ಶಿವಮೊಗ್ಗ ತಾಲೂಕಿನ ಹೊಳಲೂರು 1, ಹೊಳಲೂರು 2, ನಿದಿಗೆ 1, ನಿದಿಗೆ 2, ಆಯನೂರು, ಹಾರನಹಳ್ಳಿ ಮತ್ತು ಕುಂಸಿ, ಭದ್ರಾವತಿ ತಾಲೂಕಿನ ಹೊಳೆಹೊನ್ನೂರು 1, ಹೊಳೆಹೊನ್ನೂರು 2, ಹೊಳೆಹೊನ್ನೂರು 3 ಹೋಬಳಿಗಳನ್ನು ಸೇರಿಸಿ ಶಿವಮೊಗ್ಗ ಗ್ರಾಮಾಂತರ ತಾಲೂಕು ರಚಿಸಬಹುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಈ ಕುರಿತು ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]