ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ನವೆಂಬರ್ 2021
ಕಸ ಸಂಗ್ರಹಕ್ಕೆ ಹೋದಾಗ ಹಲ್ಲೆಗೊಳಗಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೌರ ಕಾರ್ಮಿಕರನ್ನು ಸಚಿವ ಕೆ.ಎಸ್.ಈಶ್ವರಪ್ಪ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಈಶ್ವರಪ್ಪ ಅವರು ಪೌರ ಕಾರ್ಮಿಕ ದೇವರಾಜ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಅಲ್ಲದೆ ಘಟನೆ ಕುರಿತು ಮಾಹಿತಿ ಪಡೆದು, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.
‘ಏನ್ ಮಾಡ್ತಿದೆ ಪೊಲೀಸ್ ಇಲಾಖೆ?’
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಪ್ರಕರಣ ಸಂಬಂಧ ಇನ್ನೂ ಇಬ್ಬರನ್ನು ಅರೆಸ್ಟ್ ಮಾಡಿದ್ದಾರಂತೆ. ಪೊಲೀಸ್ ಇಲಾಖೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಗೂಂಡಾಗಳಿಗೆ ಭಯವಿಲ್ಲದ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಇದನ್ನೂ ಓದಿ | ಕಸ ಸಂಗ್ರಹಕ್ಕೆ ಹೋದ ಪೌರ ಕಾರ್ಮಿಕರಿಗೆ ರಕ್ತ ಬರುವಂತೆ ಹೊಡೆದವರ ವಿರುದ್ಧ ಎಫ್ಐಆರ್
ಜಿಲ್ಲಾ ರಕ್ಷಣಾಧಿಕಾರಿ ಭೇಟಿ
ಇನ್ನು, ಘಟನೆ ಕುರಿತು ಮಾಹಿತಿ ಪಡೆಯಲು ಮತ್ತು ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆಯಲ್ಲಿ ಏನೆಲ್ಲ ಆಗುತ್ತಿದೆ ಅನ್ನುವ ಕುರಿತು ಚರ್ಚೆ ನಡೆಸಲು ಜಿಲ್ಲಾ ರಕ್ಷಣಾಧಿಕಾರಿ ಅವರನ್ನು ಭೇಟಿಯಾಗುವುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಇವತ್ತು ಸಂಜೆ ಎಸ್.ಪಿ ಅವರನ್ನು ಭೇಟಿಯಾಗುವುದಾಗಿ ಹೇಳಿದರು.
ಮೇಯರ್ ಸುನೀತಾ ಅಣ್ಣಪ್ಪ, ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಮಾಜಿ ಮೇಯರ್ ಸುವರ್ಣಾ ಶಂಕರ್ ಸೇರಿದಂತೆ ಹಲವರು ಈ ವೇಳೆ ಇದ್ದರು.