ಶಿವಮೊಗ್ಗ ಲೈವ್.ಕಾಂ | SAGARA NEWS | 26 ಆಗಸ್ಟ್ 2021
ಶರಾವತಿ ಹಿನ್ನೀರಿನಲ್ಲಿ ನಿರ್ಮಿಸುತ್ತಿರುವ ಸಿಗಂದೂರು ಸೇತುವೆ 2023ಕ್ಕೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಕಳಸವಳ್ಳಿ- ಅಂಬಾರಗೊಡ್ಲುಗೆ ಭೇಟಿ ನೀಡಿದ ಸಚಿವ ಈಶ್ವರಪ್ಪ ಲಾಂಚ್ನಲ್ಲಿ ಸಂಚರಿಸಿ ಸೇತುವೆ ಕಾಮಗಾರಿ ಪರಿಶೀಲಿಸಿದರು. ಈಗಾಗಲೇ ಶೇ.30ರಷ್ಟು ಕಾಮಗಾರಿ ಪೂರ್ಣವಾಗಿದ್ದು ಈ ಸೇತುವೆ ಮೂಲಕ ಶರಾವತಿ ಕಣಿವೆ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.
ತ್ವರಿತವಾಗಿ ಸೇತುವೆ ಕಾಮಗಾರಿ ಪೂರ್ಣ ಗೊಳಿಸುವಂತೆ ಇಂಜಿನಿಯರ್ಗಳಿಗೆ ಸೂಚಿಸಿದ ಸಚಿವ ಈಶ್ವರಪ್ಪ, ಶರಾವತಿ ನದಿಗೆ ನಿರ್ಮಿಸುತ್ತಿರುವ ಬೃಹತ್ ಸೇತುವೆ ಇದಾಗಿದೆ. ಇದರಿಂದ ಸಿಗಂದೂರಿಗೆ ತೆರಳುವ ಪ್ರವಾಸಿಗರಿಗೆ ಸಾಕಷ್ಟು ಅನುಕೂಲವಾಗಲಿದೆ. ಅಲ್ಲದೇ ಈ ಭಾಗದ ಜನರ ಬಹಳ ವರ್ಷಗಳ ಬೇಡಿಕೆ ಈಡೇರಲಿದೆ ಎಂದು ಹೇಳಿದರು.
ಶರಾವತಿ ಹಿನ್ನೀರಿನಲ್ಲಿ ನೀರು ಸಂಗ್ರಹ ಪ್ರಮಾಣ ಜಾಸ್ತಿ ಇದೆ. ಇದರಿಂದ ಕೆಲಸ ಮಾಡಲು ತೊಂದರೆಯಾಗುತ್ತಿದೆ. ನೀರು ಸಂಗ್ರಹ ಪ್ರಮಾಣ ಕಡಿಮೆ ಮಾಡಲು ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಚಿಂತನೆ ನಡೆಸಲಾಗಿದೆ. ಲಿಂಗನಮಕ್ಕಿ, ಶರಾವತಿ ಸೇರಿದಂತೆ ಇತರ ವಿದ್ಯುದಾಗಾರಗಳಲ್ಲಿ ಜಲವಿದ್ಯುತ್ ಉತ್ಪಾದನೆ ಜಾಸ್ತಿ ಮಾಡಲು ಯೋಚಿಸಲಾಗಿದೆ. ಭವಿಷ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ತೊಂದರೆ ಆಗದಂತೆ ನೀರಿನ ಸಂಗ್ರಹ ಕಡಿಮೆ ಮಾಡುವ ಬಗ್ಗೆಯು ತಜ್ಞರ ಜತೆ ಚರ್ಚೆ ನಡೆಸಿ, ಸಮಯಕ್ಕೆ ಸರಿಯಾಗಿ ಸೇತುವೆ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಶಾಸಕ ಹರತಾಳು ಹಾಲಪ್ಪ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್ ಪೀರ್ ಪಾಷಾ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಯೋಜನಾ ಆಯೋಗದ ಸದಸ್ಯ ಪ್ರಸನ್ನ ಕೆರೆಕೈ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರು ಈ ವೇಳೆ ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494