ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಆಗಸ್ಟ್ 2020
ಜಿಲ್ಲಾ ಪಂಚಾಯಿತಿಯ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರು ಇವತ್ತು ಅಧಿಕಾರ ಸ್ವೀಕರಿಸಿದರು. ಮೂವರು ಬಿಜೆಪಿ ಸದಸ್ಯರು ಸ್ಥಾಯಿ ಸಮಿತಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಆನವೇರಿ ಕ್ಷೇತ್ರದ ಜಿಪಂ ಸದಸ್ಯ ವೀರಭದ್ರಪ್ಪ ಪೂಜಾರ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ನಗರ ಕ್ಷೇತ್ರದ ಸದಸ್ಯ ಸುರೇಶ್ ಬಿ. ಸ್ವಾಮಿರಾವ್ ಹಾಗೂ ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶಿಕಾರಿಪುರ ತಾಲೂಕು ಸುಣ್ಣದಕೊಪ್ಪ ಜಿಪಂ ಕ್ಷೇತ್ರದ ರೇಣುಕಾ ಹನುಮಂತಪ್ಪ ಅಧಿಕಾರ ಸ್ವೀಕರಿಸಿದರು.
ಈ ಹಿಂದಿನ ಅಧ್ಯಕ್ಷರ ಅಧಿಕಾರ ಅವಧಿ ಮುಗಿದಿದ್ದರಿಂದ ಕಳೆದ ವಾರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ನೂತನ ಅಧ್ಯಕ್ಷರನ್ನು ನೇಮಿಸಿದ್ದಾರೆ. ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ ಸೇರಿದಂತೆ ಹಲವಾರು ಗಣ್ಯರು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.
ಅವಕಾಶ ಸಮರ್ಥವಾಗಿ ನಿಭಾಯಿಸುತ್ತೇನೆ
ಕೊಟ್ಟ ಅವಕಾಶವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಒಳ್ಳೆಯ ಆಶೋತ್ತರ ಇಟ್ಟುಕೊಂಡು ರಾಜಕೀಯ ಪ್ರವೇಶ ಮಾಡಿದ್ದೇನೆ. ಪಕ್ಷ ಜಿಪಂಗೆ ಅವಕಾಶ ಮಾಡಿಕೊಟ್ಟಿತು. ಪಕ್ಷದ ನಾಯಕರು ಹಾಗೂ ಎಲ್ಲರ ಸಹಕಾರದಿಂದ ಇದೀಗ ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ದೊರೆತಿದೆ. ಇದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಜನಸಾಮಾನ್ಯರಿಗೆ ಆಗಬೇಕಾದ ಅನುಕೂಲತೆ ಕಲ್ಪಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ವೀರಭದ್ರಪ್ಪ ಪೂಜಾರ್ ತಿಳಿಸಿದ್ದಾರೆ.
ಕಳಂಕ ಬಾರದಂತೆ ಸಮರ್ಥವಾಗಿ ನಿಭಾಯಿಸುತ್ತೇವೆ
ಪಕ್ಷ ಕೊಟ್ಟಿರುವಂತಹ ಜವಾಬ್ದಾರಿಯನ್ನು ಯಾವುದೇ ಕಳಂಕ ಬಾರದ ರೀತಿಯಲ್ಲಿ ಸಮರ್ಥವಾಗಿ ನಿಭಾಯಿಸುತ್ತೇನೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳಿಗೆ ಸಹಕಾರ ನೀಡುವುದರ ಜೊತೆಗೆ ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಸುರೇಶ್ ಬಿ. ಸ್ವಾಮಿರಾವ್ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]