ಪ್ರಶ್ನೆ ಪತ್ರಿಕೆಯಲ್ಲಿ ಉಂಟಾಗಿದ್ದ ಗೊಂದಲದಿಂದ ಇಂದು ನಡೆಯಬೇಕಿದ್ದ ಪರೀಕ್ಷೆ ದಿಢೀರ್ ಮುಂದೂಡಿಕೆಯಾಗಿತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಈಗ ಗೊಂದಲಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿವಿ ಪ್ರಕಟಣೆಯಲ್ಲಿ ಏನಿದೆ?
ಕನ್ನಡ ವಿಷಯದ ಪರೀಕ್ಷಾ ಮಂಡಳಿಯ ಅಧ್ಯಕ್ಷರನ್ನು ಕರೆಯಿಸಿ ಪರೀಕ್ಷಾ ವಿಭಾಗದಲ್ಲಿ ವಿಚಾರಣೆ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ, ಪರಿಶೀಲನೆ ನಡೆಸಿದ ಅಧ್ಯಾಪಕರು ಮತ್ತು ಅಧ್ಯಕ್ಷರು ಹೊಣೆಗಾರರಾಗಿರುತ್ತಾರೆ. ಈ ಕುರಿತು ಪರೀಕ್ಷಾ ಮಂಡಳಿಯ ಅಧ್ಯಕ್ಷರು ತಪ್ಪೊಪ್ಪಿಗೆಯ ಪತ್ರ ಸಲ್ಲಿಸಿದ್ದು, ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ವಿಶ್ವವಿದ್ಯಾಲಯದ ಘನತೆಗೆ ಕುಂದು ತಂದಿರುವ ಮತ್ತು ವಿದ್ಯಾರ್ಥಿಗಳಿಗೆ ತೊಡಕು ಉಂಟು ಮಾಡಿರುವ ಈ ಪ್ರಕರಣಕ್ಕೆ ಸಂಬಂಧಪಟ್ಟವರ ಮೇಲೆ ಪರೀಕ್ಷಾ ಕಾಯ್ದೆಯ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಹಣ್ಣು ಮೇಳ, ಅಪರೂಪದ ಮಾವು, ಹಲಸು ಮಾರಾಟ, ಯಾವೆಲ್ಲ ವೆರೈಟಿಯ ಹಣ್ಣುಗಳಿವೆ?
