ಶಿವಮೊಗ್ಗ: ರಾಜ್ಯದ ಮಹಾನಗರಗಳ ಮೂಲ ಸೌಲಭ್ಯಗಳ ಅಭಿವೃದ್ಧಿಗಾಗಿ ಸರ್ಕಾರವು ₹2,600 ಕೋಟಿ ಮೀಸಲಿಡಲಾಗಿದೆ. ಅದರಲ್ಲಿ ಶಿವಮೊಗ್ಗ ನಗರಕ್ಕೆ ₹200 ಕೋಟಿ ಅನುದಾನ (Grant) ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದರು. ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
ಶಿವಮೊಗ್ಗ ಹೆಲಿಪ್ಯಾಡ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಭೈರತಿ ಸುರೇಶ್, ಈ ಅನುದಾನದಡಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದರು.

ಅಭಿವೃದ್ಧಿ ನಿರಂತರ ಪ್ರಕ್ರಿಯೆ
ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಭೈರತಿ ಸುರೇಶ್, “ಅಭಿವೃದ್ಧಿ ಎಂಬುದು ನಿರಂತರ ಪ್ರಕ್ರಿಯೆ. ಒಮ್ಮೆ ಹಣ ನೀಡಿದ ಕೂಡಲೇ ಕೆಲಸ ಮುಗಿಯುವುದಿಲ್ಲ. ನಮ್ಮ ಸರ್ಕಾರ ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಬದ್ಧವಾಗಿದೆ,” ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ : ಶಿವಮೊಗ್ಗಕ್ಕೇ ಬೇಕು ಹೈಕೋರ್ಟ್ ಸಂಚಾರಿ ಪೀಠ, ವಕೀಲರ ಒತ್ತಾಯವೇಕೆ?
ಕೇಂದ್ರದ ನೀತಿ ವಿರುದ್ಧ ಕಿಡಿ
ಗ್ಯಾಸ್ ಮತ್ತು ಇಂಧನ ಬೆಲೆ ಏರಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಭೈರತಿ ಸುರೇಶ್, “ಐದು ರಾಜ್ಯಗಳಲ್ಲಿ ಚುನಾವಣೆ ಮುಗಿಯುತ್ತಿದ್ದಂತೆಯೇ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಮೇಲೆ ಹೊರೆ ಹಾಕುತ್ತಿದೆ. ಪೆಟ್ರೋಲ್, ಡಿಸೇಲ್ ಮತ್ತು ಗ್ಯಾಸ್ ಬೆಲೆ ಏರಿಕೆಯು ವಿದ್ಯುತ್ ಉತ್ಪಾದನಾ ವೆಚ್ಚದ ಮೇಲೆಯೂ ಪ್ರಭಾವ ಬೀರುತ್ತದೆ. ಇದಕ್ಕೆಲ್ಲ ಕೇಂದ್ರದ ತಪ್ಪು ನೀತಿಗಳೇ ಕಾರಣ,” ಎಂದು ಆರೋಪಿಸಿದರು.

ಸಂಪುಟ ಪುನಾರಚನೆ ಕುರಿತು
“ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷ ನೀಡುವ ಜವಾಬ್ದಾರಿಯನ್ನು ನಿರ್ವಹಿಸಲು ನಾವೆಲ್ಲರೂ ಬದ್ಧ. ಬಿಜೆಪಿಯವರು ಈ ಹಿಂದೆ ಮೂವರು ಮುಖ್ಯಮಂತ್ರಿಗಳನ್ನು ಬದಲಿಸಿದ್ದರು, ಹಾಗಿದ್ದ ಮೇಲೆ ಸಂಪುಟದಲ್ಲಿ ಬದಲಾವಣೆ ಮಾಡುವುದರಲ್ಲಿ ತಪ್ಪೇನಿದೆ” ಎಂದು ಪ್ರಶ್ನಿಸಿದರು.