ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜೂನ್ 2020

ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರೀಕ್ಷೆ ಸಿದ್ಧತೆ ಕುರಿತು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಪಿಯುಸಿ ಪರೀಕ್ಷೆ ನಡೆಯಲಿರುವ ಎಲ್ಲಾ 33 ಕೇಂದ್ರಗಳನ್ನು ಈಗಾಗಲೆ ಎರಡು ಬಾರಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಪರೀಕ್ಷೆಗೆ ಕೊಠಡಿಯನ್ನು ಹಸ್ತಾಂತರಿಸುವ ಪೂರ್ವದಲ್ಲಿ ಇನ್ನೊಮ್ಮೆ ಸ್ಯಾನಿಟೈಸ್ ಮಾಡಲು ಸೂಚಿಸಲಾಗಿದೆ ಎಂದರು.

ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯ
ಪ್ರತಿ ವಿದ್ಯಾರ್ಥಿ ಮಾಸ್ಕ್ ಧರಿಸಿಕೊಂಡು ಬರಲು ಸೂಚಿಸಲಾಗಿದೆ. ಆದರೂ ಪ್ರತಿಯೊಬ್ಬ ವಿದ್ಯಾರ್ಥಿಗೂ ಒಂದು ಮಾಸ್ಕ್ ಒದಗಿಸಬೇಕು. ಇದೇ ರೀತಿ ದೂರದಿಂದ ಬರುವ ವಿದ್ಯಾರ್ಥಿಗಳಿಗೆ ನೀರು ಹಾಗೂ ಬಿಸ್ಕಿಟ್ ಪ್ಯಾಕೇಟ್ ನೀಡಲು ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
129 ರೂಟ್, 133 ಬಸ್
ಪಿಯು ವಿದ್ಯಾರ್ಥಿಗಳಿಗಾಗಿ ಒಟ್ಟು 129 ರೂಟ್ಗಳಿಗೆ 133 ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಬಸ್ಗೆ ಒಬ್ಬರು ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಏನಾದರೂ ಅನಾನುಕೂಲತೆ ಉಂಟಾದರೆ ನೋಡಲ್ ಅಧಿಕಾರಿ ಜವಾಬ್ದಾರಿ ಮಾಡಲಾಗುವುದು ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗೂ ಪೂರ್ಣ ಸಿದ್ಧತೆ
ಇದೇ ರೀತಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಲೋಪ ಉಂಟಾಗದಂತೆ ಮುನ್ನಚ್ಚರಿಕೆ ವಹಿಸಬೇಕು. ಒಟ್ಟು 84 ಕೇಂದ್ರಗಳಿದ್ದು, ಗ್ರಾಮೀಣ ಭಾಗದಲ್ಲಿ 40 ಹಾಗೂ ನಗರ ಪ್ರದೇಶದಲ್ಲಿ 44 ಕೇಂದ್ರಗಳಿವೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆ ತರಲು 239 ಬಸ್ ವ್ಯವಸ್ಥೆ ಮಾಡಲಾಗಿದೆ. 189 ರೂಟ್ಗಳಲ್ಲಿ ಒಟ್ಟು 336 ಪಾಯಿಂಟ್ ಗುರುತಿಸಲಾಗಿದೆ. ವಿದ್ಯಾರ್ಥಿಗಳನ್ನು ಕರೆ ತರಲು ರೂಟ್ ಬಸ್ಗಳನ್ನು ಹೊರತುಪಡಿಸಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಬೇಕು. ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಿಂದ ಸ್ವಲ್ಪ ದೂರದಲ್ಲಿ ಬಿಸಿಯೂಟ ವ್ಯವಸ್ಥೆ ಮಾಡಬೇಕು ಎಂದು ಸಚಿವರು ತಿಳಿಸಿದರು.
ಹಾಲ್ ಟಿಕೆಟ್ ಜೊತೆಗೆ ಮೂರು ಮಾಸ್ಕ್
ವಿದ್ಯಾರ್ಥಿಗಳು ಹಾಲ್ ಟಿಕೆಟ್ ಪಡೆಯಲು ಬರುವ ಸಂದರ್ಭದಲ್ಲಿ 3 ಮಾಸ್ಕ್ ಒದಗಿಸಲು ಸೂಚಿಸಲಾಗಿದೆ. ಸುಗಮವಾಗಿ ಪರೀಕ್ಷೆ ನಡೆಸಲು ಸರ್ಕಾರದ ವತಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪಾಲಕರು ಸಹ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಡಿಡಿಪಿಯು ನಾಗರಾಜ ಕಾಗಲಕರ್, ಡಿಡಿಪಿಐ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200