SHIMOGA : ವಿವಿಧ ಕೋರ್ಸುಗಳಿಗೆ ಏ.18 ಮತ್ತು 19 ರಂದು ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು (ಸಿಇಟಿ) ನಡೆಯಲಿದೆ. ಶಾಂತಿಯುತವಾಗಿ ಹಾಗೂ ಸುವ್ಯಸ್ಥಿತವಾಗಿ ಪರೀಕ್ಷೆ ನಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಡಿಡಿಪಿಯು ಕೃಷ್ಣಪ್ಪ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಯೋಗ ಮತ್ತು ನ್ಯಾಚುರೋಪತಿ, ಬಿಎಸ್ಸಿ(ನರ್ಸಿಂಗ್) ಫಾರ್ಮಸಿ ಮುಂತಾದ ಕೋರ್ಸ್ಗಳಿಗೆ ಪ್ರವೇಶಾತಿ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಏ.18 ಮತ್ತು 19 ರಂದು ಬೆಳಿಗ್ಗೆ 10.30 ರಿಂದ 11.50 ಹಾಗೂ ಮಧ್ಯಾಹ್ನ 2.30 ರಿಂದ 3.50 ರವರೆಗೆ ನಡೆಸಲಿದೆ. ಶಿವಮೊಗ್ಗ ನಗರದಲ್ಲಿ 20 ಪರೀಕ್ಷಾ ಕೇಂದ್ರಗಳು,. ಭದ್ರಾವತಿಯಲ್ಲಿ 4 ಮತ್ತು ಸಾಗರದ 2 ಪರೀಕ್ಷಾ ಕೇಂದ್ರ ಸೇರಿ ಒಟ್ಟು 26 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ಕೇಂದ್ರಗಳಿಗೆ ಅಧಿಕಾರಿಗಳ ತ್ರಿಸದಸ್ಯ ಸಮಿತಿ ಹಾಗೂ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ವೀಕ್ಷಕರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು, ಇತರೆ ಅಧಿಕಾರಿಗಳನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳಾದ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರು, ಸಿಸಿಟಿವಿ, ಇತರೆ ವ್ಯವಸ್ಥೆಗಳನ್ನು ಮಾಡಲು ಸೂಚಿಸಿ, ಭೇಟಿ ನೀಡಿ ಖಾತ್ರಿ ಪಡಿಸಿಕೊಳ್ಳಲು ಸೂಚಿಸಿದರು.
ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷಾ ಅವಧಿಯಲ್ಲಿ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿದ್ದು ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಹಾಗು ಪರೀಕ್ಷಾ ಕೇಂದ್ರಗಳಿಗೆ ಭದ್ರತೆ ಒದಗಿಸಲು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುವುದು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಹಾಗೂ ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣ, ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ವಿವಿಧ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ ಎಂದು ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಡಿಹೆಚ್ಓ ಡಾ.ನಟರಾಜ್, ಪೊಲೀಸ್ ಅಧಿಕಾರಿ ಅನಸೂಯ ಹಾಗೂ ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.
ಇದನ್ನೂ ಓದಿ – ಶಿವಮೊಗ್ಗದ ಮೇಘನಾಗೆ UPSC ಪರೀಕ್ಷೆಯಲ್ಲಿ ಮತ್ತೊಮ್ಮೆ ರ್ಯಾಂಕ್, ಐಎಎಸ್ ಹುದ್ದೆ ದೊರೆಯುವ ನಿರೀಕ್ಷೆ