ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯ ಹೆಸರಿನಲ್ಲಿ ನಕಲಿ ಪತ್ರಗಳನ್ನು ಸೃಷ್ಟಿಸಿ, ಸಾಲ ಕೊಡಿಸುವುದಾಗಿ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ನಿವಾಸಿಯಾದ ಅಮೃತ್ ಜಿ. ಎಂಬ ವ್ಯಕ್ತಿಯು ಇಲಾಖೆಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿದ್ದಾನೆ. ಅದರಲ್ಲಿ ದೇವರಾಜ ಅರಸು ಸಾಲ ಮಂಜೂರಾತಿ ಎಂದು ಮುದ್ರಿಸಿ, ಸಾಲ ಕೊಡಿಸುವ ಆಮಿಷ ಒಡ್ಡಿ ಈಗಾಗಲೇ 150ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಂದ ಹಣ ಪಡೆದು ವಂಚಿಸಿರುವುದು ತಿಳಿದುಬಂದಿದೆ.

ಸದರಿ ವ್ಯಕ್ತಿಗೂ ತಮ್ಮ ನಿಗಮಕ್ಕೂ ಯಾವುದೇ ಸಂಬಂಧವಿಲ್ಲ ಹಾಗೂ ಆತನೊಂದಿಗೆ ಯಾವುದೇ ಪತ್ರ ವ್ಯವಹಾರ ನಡೆಸಿಲ್ಲ ಎಂದು ಜಿಲ್ಲಾ ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಇಂತಹ ವಂಚಕರ ಮಾತುಗಳನ್ನು ನಂಬಿ ಹಣ ನೀಡಿ ಮೋಸ ಹೋಗಬಾರದು ಎಂದು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
