SHIVAMOGGA LIVE NEWS | 10 JANUARY 2024
SHIMOGA : ಬಿಜೆಪಿಯವರ ಟೀಕೆ, ಟಿಪ್ಪಣಿಗೆ ಕಾರ್ಯಕ್ರಮದ ಮೂಲಕವೆ ಉತ್ತರ ನೀಡುತ್ತಿದ್ದೇವೆ. ಜ.12ರಂದು ನಗರದಲ್ಲಿ ಯುವ ನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಮೂಲಕ ಚುನಾವಣೆ ಸಂದರ್ಭ ಘೋಷಿಸಿದ ಐದನೆ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುತ್ತಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ನಗರದ ಫ್ರೀಡಂ ಪಾರ್ಕ್ನಲ್ಲಿ ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಸುಮಾರು ಒಂದೂವರೆ ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಿಂದ ಪದವಿ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಇದಕ್ಕಾಗಿ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರತಿ ಕುಟುಂಬಕ್ಕೆ ಐದು ಸಾವಿರ
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ಅಂದಾಜು ಐದು ಸಾವಿರ ರೂ. ಅನುಕೂಲವಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 75 ಲಕ್ಷ ರೂ. ಈ ಯೋಜನೆಗಳ ಮೂಲಕ ಲಾಭ ದೊರೆಯುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಶಕ್ತಿ ತುಂಬಿದ್ದೇವೆ. ಇನ್ನು ಮುಂದೆ ವಿವಿಧ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಗಳತ್ತ ಸರ್ಕಾರ ಗಮನ ಹರಿಸಲಿದೆ. ಬಿಜೆಪಿಯವರ ಟೀಕೆ, ಟಿಪ್ಪಣಿಗೆ ಕಾರ್ಯಕ್ರಮದ ಮೂಲಕವೆ ಉತ್ತರ ಕೊಡುತ್ತೇವೆ. ಬಿಜೆಪಿಯವರು ತಾವು ನೀಡಿದ್ದ ಭರವಸೆಗಳ ಪೈಕಿ ಯಾವೆಲ್ಲ ಕಾರ್ಯಕ್ರಮ ಅನುಷ್ಠಾನ ಮಾಡಿದ್ದಾರೆ ತೋರಿಸಲಿ ಎಂದು ಸವಾಲು ಹಾಕಿದರು.
55 ಸಾವಿರ ಅರ್ಜಿಗಳು ಬಂದಿವೆ
ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಯುವ ನಿಧಿ ಯೋಜನೆಗೆ ಈಗಾಗಲೆ 55 ಸಾವಿರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಮತ್ತಷ್ಟು ಅರ್ಜಿಗಳು ಬರುವ ನಿರೀಕ್ಷೆ ಇದೆ. ಸ್ವಾಮಿ ವಿವೇಕಾನಂದ ಅವರು ಯುವಕರಿಗೆ ಸ್ಪೂರ್ತಿ. ಆದ್ದರಿಂದ ಅವರ ಜನ್ಮದನವಾದ ಜ.12ರಂದು ಯುವನಿಧಿ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ. ಈ ಯೋಜನೆ ನಿರಂತರವಾಗಿ ಮುಂದುವರೆಯಲಿದೆ. ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಪದವಿ ಮುಗಿಸಿ ಉದ್ಯೋಗ ಲಭಿಸದೆ ಇರುವ ಯುವಕರನ್ನು ನೋಂದಾಯಿಸಲಾಗುತ್ತದೆ. ಅವರಿಗೆ ಯುವ ನಿಧಿ ಯೋಜನೆಯ ಹಣ ದೊರೆಯುವುದರ ಜೊತೆಗೆ ಕೌಶಲ್ಯ ಅಭಿವೃದ್ಧಿಗು ಒತ್ತು ನೀಡಲಾಗುತ್ತದೆ ಎಂದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಸಿಎಂ ಸಿದ್ದರಾಮಯ್ಯ, ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಹೆಚ್ಚು ಜನ ಭಾಗಿ
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಕಾಂಗ್ರೆಸ್ ಪ್ರಮುಖರಾದ ವಿಜಯ ಕುಮಾರ್, ದೇವೇಂದ್ರಪ್ಪ, ರಮೇಶ್, ಕಲಗೋಡು ರತ್ನಾಕರ್ ಸೇರಿದಂತೆ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200