ಶಿವಮೊಗ್ಗ: ಬೆಂಗಳೂರಿನ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯು ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನವನ್ನು ಹೊಂದಿದ್ದು, ಸಂಕೀರ್ಣ ಬ್ಲಾಕ್ಗಳು ಸೇರಿದಂತೆ ಯಾವುದೇ ರೀತಿಯ ಕಠಿಣ ಶಸ್ತ್ರಚಿಕಿತ್ಸೆಗಳನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸುವ ಸುಧಾರಿತ ಸೌಲಭ್ಯಗಳನ್ನು ಹೊಂದಿದೆ ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಹೃದಯರೋಗ ತಜ್ಞ ಹಾಗೂ ಸಲಹೆಗಾರ ಡಾ. ಕೇಶವ್ ಆರ್. ತಿಳಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಸಂಕೀರ್ಣ ಶಸ್ತ್ರಚಿಕಿತ್ಸೆಗಳ ಸಂದರ್ಭದಲ್ಲಿ ಸೂಕ್ತ ತಂತ್ರಜ್ಞಾನ ಹಾಗೂ ತಜ್ಞ ವೈದ್ಯರಿರುವ ಆಸ್ಪತ್ರೆಯ ಆಯ್ಕೆ ಅತ್ಯಂತ ಪ್ರಮುಖವಾಗಿರುತ್ತದೆ ಎಂದು ತಿಳಿಸಿದರು.

ವಿಶೇಷ ಅರಿವು ಕಾರ್ಯಕ್ರಮ
ಹೃದಯದ ಆರೋಗ್ಯ ಮತ್ತು ತಂತ್ರಜ್ಞಾನದ ಬಳಕೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಸ್ಪತ್ರೆಯ ವತಿಯಿಂದ ರಾಜ್ಯಾದ್ಯಂತ ವಿಶೇಷ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಡಾ. ಆರ್.ಕೇಶವ್ ತಿಳಿಸಿದರು.
ಹೃದಯ ಸಂಬಂಧಿ ಕಾಯಿಲೆ ಹೆಚ್ಚಳ
ಆಸ್ಪತ್ರೆಯ ಹೃದಯ ಮತ್ತು ಶ್ವಾಸಕೋಶ ಕಸಿ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ದೇವಾನಂದ ಎನ್.ಎಸ್. ಮಾತನಾಡಿ, ದೇಶದಲ್ಲಿ ಇತ್ತೀಚಿಗೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ. ಇಡೀ ದೇಶದಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಶೇ.27ರಷ್ಟು ಹೆಚ್ಚುತ್ತಿವೆ. ಅದರಲ್ಲೂ ಹುಟ್ಟಿದ ಪ್ರತಿ ಸಾವಿರ ಮಕ್ಕಳಲ್ಲಿ ಸುಮಾರು 8 ರಿಂದ 10 ಮಕ್ಕಳಲ್ಲಿ ಈ ಕಾಯಿಲೆ ಕಾಣಿಸಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿ ಎಂದರು.
ರೋಗ ಲಕ್ಷಣಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದು ಅಗತ್ಯ. ರೋಗದ ಬಗ್ಗೆ ನಿಖರ ಮಾಹಿತಿ ಇಲ್ಲದಿರುವುದು, ಸುಧಾರಿತ ಚಿಕಿತ್ಸೆಯ ಕೊರತೆ, ಬದಲಾದ ಜೀವನಶೈಲಿ, ರಕ್ತದೊತ್ತಡ, ಮಧುಮೇಹ ಹಾಗೂ ಧೂಮಪಾನದಂತಹ ಅಭ್ಯಾಸಗಳಿಂದ ಈ ಸಮಸ್ಯೆ ಉಲ್ಬಣಿಸುತ್ತಿದೆ. ಹೀಗಾಗಿ 40 ವರ್ಷ ಮೇಲ್ಪಟ್ಟವರು ಹಾಗೂ ಬಿಪಿ, ಮಧುಮೇಹ ಇರುವವರು ವರ್ಷಕ್ಕೆ ಒಮ್ಮೆಯಾದರೂ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

