ಶಿವಮೊಗ್ಗ: ಇಲ್ಲಿನ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ)ದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಜೆಡಿಎಸ್ ನಗರ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ (JDS protest)ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇದುವರೆಗೂ ಸೂಡಾ ವ್ಯಾಪ್ತಿಯಲ್ಲಿ ನಡೆಸಿರುವ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸಬೇಕು. ಬಡವರಿಗೆ ಕಡಿಮೆ ದರದಲ್ಲಿ ನಿವೇಶನ ಕೊಡಬೇಕಾದ ಸೂಡಾ, ಸುಳ್ಳು ರಸೀದಿ, ಅವೈಜ್ಞಾನಿಕ ಕಾಮಗಾರಿಗಳ ಮೂಲಕ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುತ್ತಿದೆ. ಈ ಬಗ್ಗೆ ಇಬ್ಬರು ಗುತ್ತಿಗೆದಾರರು ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದರು.
ಇದನ್ನೂ ಓದಿ – ಅರ್ಧಕ್ಕರ್ಧ ಭದ್ರಾವತಿ ತಾಲೂಕಿನಲ್ಲಿ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್
ಊರಗಡೂರು ಬಡಾವಣೆ ಸೇರಿದಂತೆ ಸುಡಾ ನಿರ್ಮಿಸುತ್ತಿರುವ ಬಡಾವಣೆಗಳ ಕಾಮಗಾರಿಯಲ್ಲೂ ಅಕ್ರಮ ನಡೆದಿದೆ. ಇದರಿಂದ ನಿವೇಶನ ಆಕಾಂಕ್ಷಿಗಳಿಗೆ ತೊಂದರೆಯಾಗಿದೆ. ಬಡಾವಣೆಗಳ ರಸ್ತೆ ನಿರ್ಮಾಣಕ್ಕೆ ನಿವೇಶನದ ಜಾಗದಿಂದಲೇ ಮಣ್ಣು ಬಗೆದು ಬಳಸಲಾಗಿದೆ. ಆ ನಿವೇಶನದ ಗುಂಡಿಗಳಿಗೆ ನಗರದ ಕಸ ತುಂಬಲಾಗಿದೆ ಎಂದು ಆರೋಪಿಸಿದರು.

ಜಿಲ್ಲಾಡಳಿತ 91ಕ್ಕೂ ಹೆಚ್ಚು ಕಾಮಗಾರಿಗಳ ಬಗ್ಗೆ ತನಿಖೆ ನಡೆಸಬೇಕು. ದುರುಪಯೋಗವಾದ ಹಣ ತಪ್ಪಿತಸ್ಥರಿಂದ ಪ್ರಾಧಿಕಾರಕ್ಕೆ ಮರು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕಡಿದಾಳ್ ಗೋಪಾಲ್, ಮುಖಂಡರಾದ ದೀಪಕ್ ಸಿಂಗ್, ಗೀತಾ ಸತೀಶ್, ಸಂಜಯ್, ಇನ್ನಿತರರು ಇದ್ದರು.

About The Editor
ನಿತಿನ್ ಆರ್.ಕೈದೊಟ್ಲು






