ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ನವದೆಹಲಿ/ಶಿವಮೊಗ್ಗ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಉಡಾನ್‘ ಯೋಜನೆಯನ್ನು (UDAN scheme) ಅನುಷ್ಠಾನಗೊಳಿಸುವಲ್ಲಿ ಕರ್ನಾಟಕವು ದೇಶದಲ್ಲೇ ಅತ್ಯಂತ ಯಶಸ್ವಿ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯಕ್ಕೆ ಮಂಜೂರಾಗಿದ್ದ ಒಟ್ಟು 128 ವಿಮಾನಯಾನ ಮಾರ್ಗಗಳ ಪೈಕಿ ಈಗಾಗಲೇ 118 ಮಾರ್ಗಗಳು ಯಶಸ್ವಿಯಾಗಿ ಕಾರ್ಯಾರಂಭ ಮಾಡಿವೆ.

ಕೇಂದ್ರ ಸಚಿವರಿಂದ ಮಾಹಿತಿ

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಉಡಾನ್ ಯೋಜನೆಯ ಮಾನದಂಡಗಳು ಮತ್ತು ವಿಮಾನಯಾನ ಸಂಸ್ಥೆಗಳ ಹೊಣೆಗಾರಿಕೆಯ ಬಗ್ಗೆ ಕೇಳಿದ್ದ ಪ್ರಶ್ನೆಗೆ, ಕೇಂದ್ರ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರು ಈ ಮಾಹಿತಿ ನೀಡಿದ್ದಾರೆ. ಕರ್ನಾಟಕದ ಈ ಯಶಸ್ಸಿನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ಪಾತ್ರ ದೊಡ್ಡದಾಗಿದ್ದು, ಮಲೆನಾಡು ಭಾಗದ ಆರ್ಥಿಕತೆ ಮತ್ತು ಪ್ರವಾಸೋದ್ಯಮಕ್ಕೆ ಇದು ಹೊಸ ವೇಗ ನೀಡಿದೆ ಎಂದು ತಿಳಿಸಿದ್ದಾರೆ.

MP-BY-raghavendra-about-Shimoga-Airport-Flight

ನಿಯಮ ಉಲ್ಲಂಘಿಸುವ ಸಂಸ್ಥೆಗಳಿಗೆ ಎಚ್ಚರಿಕೆ

ಪ್ರಯಾಣಿಕರಿಗೆ ಗುಣಮಟ್ಟದ ಸೇವೆ ನೀಡುವಲ್ಲಿ ವಿಳಂಬ ಮಾಡುವ ಅಥವಾ ನಿಯಮ ಉಲ್ಲಂಘಿಸುವ ವಿಮಾನಯಾನ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಅಂತಹ ಸಂಸ್ಥೆಗಳ ಪರ್ಫಾರ್ಮೆನ್ಸ್ ಬ್ಯಾಂಕ್ ಗ್ಯಾರಂಟಿ ಅನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಒಪ್ಪಂದ ರದ್ದುಪಡಿಸಲು ಸರ್ಕಾರಕ್ಕೆ ಸಂಪೂರ್ಣ ಅಧಿಕಾರವಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಂಸದ ಬಿ.ವೈ. ರಾಘವೇಂದ್ರ ಪ್ರತಿಕ್ರಿಯೆ

ಈ ಕುರಿತು ಹರ್ಷ ವ್ಯಕ್ತಪಡಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಪ್ರಾದೇಶಿಕ ವಿಮಾನಯಾನ ಸಂಪರ್ಕದಲ್ಲಿ ಕರ್ನಾಟಕವು ರಾಷ್ಟ್ರೀಯ ಸರಾಸರಿಗಿಂತ ಮುಂದಿರುವುದು ಹೆಮ್ಮೆಯ ವಿಷಯ. ಶಿವಮೊಗ್ಗ ವಿಮಾನ ನಿಲ್ದಾಣವು ಈ ಯಶಸ್ಸಿನ ಪ್ರಮುಖ ಮೈಲಿಗಲ್ಲಾಗಿದೆ. ಶೀಘ್ರದಲ್ಲೇ ಶಿವಮೊಗ್ಗದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಪೂರ್ಣಗೊಳ್ಳಲಿದ್ದು, ಇದರಿಂದ ಮುಂಬೈ ಮತ್ತು ದೆಹಲಿಯಂತಹ ನಗರಗಳಿಗೆ ನೇರ ಸಂಪರ್ಕ ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ – ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Sunrise Facility Services, Sri sai Trust Shimoga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 12, 2026 at 5:30 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 12, 2026

Leave a Comment