ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜೂನ್ 2020
ಮಲೆನಾಡಿನ ಜಿಲ್ಲೆಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುವುದರೊಂದಿಗೆ ಪರಿಸರಕ್ಕೆ ಪೂರಕವಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಅವರು ಹೇಳಿದರು.

ಮಂಡಳಿಯ ಕಾರ್ಯಾಲಯ ಸಭಾಂಗಣದಲ್ಲಿ ಇವತ್ತು ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದರು.
ಮಂಡಳಿಯ ವ್ಯಾಪ್ತಿಯ ಮಲೆನಾಡಿನ 13 ಜಿಲ್ಲೆಗಳು ಇದ್ದು, 65 ವಿಧಾನಸಭಾ ಕ್ಷೇತ್ರಗಳು, 12 ಸಂಸದರು, 21 ವಿಧಾನಪರಿಷತ್ ಸದಸ್ಯರ ವ್ಯಾಪ್ತಿ ಒಳಗೊಂಡಿದೆ. ಪ್ರತಿ ಜಿಲ್ಲೆಗಳಲ್ಲಿ ವಿಭಿನ್ನ ಸಮಸ್ಯೆಗಳಿದ್ದು, ಮಲೆನಾಡಿನ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಕೋನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಲಾಗುವುದು. ರಸ್ತೆ ಮತ್ತು ಚರಂಡಿಗಳ ನಿರ್ಮಾಣಕ್ಕಿಂತ ಸಣ್ಣಪುಟ್ಟ ಚೆಕ್ಡ್ಯಾಂಗಳ ನಿರ್ಮಾಣ, ಮಲೆನಾಡಿನ ಪ್ರದೇಶದಲ್ಲಿ ಅತಿ ಅಗತ್ಯವಾಗಿರುವಂತಹ ಕಾಲುಸಂಕಗಳ ನಿರ್ಮಾಣ ಇತ್ಯಾದಿಗಳಿಗೆ ಆದ್ಯತೆ ನೀಡಲಾಗುವುದು ಎಂದರು.
ಅಭಿವೃದ್ಧಿಗೆ ಜೊತೆಗೆ ಪರಿಸರ ಸಂರಕ್ಷಣೆ
ಅಭಿವೃದ್ಧಿ ಚಟುವಟಿಕೆಗಳ ಜತೆಯಲ್ಲೇ ಪರಿಸರವನ್ನು ಸಂರಕ್ಷಿಸುವ ಹೊಣೆಗಾರಿಕೆಯೂ ನಮ್ಮ ಮೇಲಿದೆ. ಈ ಹಿನ್ನೆಲೆಯಲ್ಲಿ ಪರಿಸರಕ್ಕೆ ಧಕ್ಕೆಯಾಗದಂತೆ ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಎಲ್ಲರ ಸಹಕಾರದೊಂದಿಗೆ ನಡೆಸಲು ಉದ್ದೇಶಿಸಲಾಗಿದೆ. ಪ್ರಸ್ತುತ ಮಂಡಳಿಯಲ್ಲಿ 98 ಕೋಟಿ ರೂ. ಮೊತ್ತದ 1278 ಅಭಿವೃದ್ಧಿ ಕಾಮಗಾರಿಗಳು ಅನುಷ್ಟಾನಗೊಳ್ಳುತ್ತಿವೆ. ಇದರಲ್ಲಿ 813 ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳು, 155 ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ, 19 ಕುಡಿಯುವ ನೀರಿನ ಕಾಮಗಾರಿಗಳು ಒಳಗೊಂಡಿವೆ ಎಂದು ಅವರು ಹೇಳಿದರು.
ಸಮಸ್ಯೆ ಅರಿತವರಿಂದ ಅಭಿವೃದ್ಧಿಯ ನಿರೀಕ್ಷೆ
ಡಿ.ಎಲ್.ಶಂಕರಮೂರ್ತಿ ಅವರು ಮಾತನಾಡಿ, ಮಲೆನಾಡಿನ ಸಮಸ್ಯೆಗಳನ್ನು ಚೆನ್ನಾಗಿ ಅರಿತುಕೊಂಡಿರುವ ಗುರುಮೂರ್ತಿಯವರಿಂದ ಹಲವು ಅಭಿವೃದ್ಧಿ ಕಾರ್ಯಗಳನ್ನು ನಿರೀಕ್ಷಿಸಬಹುದು ಎಂದು ಹೇಳಿ ಶುಭ ಹಾರೈಸಿದರು.
ಲೋಕಸಭಾ ಸದಸ್ಯ ಎಂ.ವೈ.ರಾಘವೇಂದ್ರ ಅವರು ಮಾತನಾಡಿ, ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಅನುಷ್ಟಾನಗೊಳ್ಳುತ್ತಿವೆ. ಸುಮಾರು 2ಸಾವಿರ ಕೋಟಿ ರೂ. ವೆಚ್ಚದ ನೀರಾವರಿ ಯೋಜನೆಗಳು ತ್ವರಿತಗತಿಯಲ್ಲಿ ಅನುಷ್ಟಾನಗೊಳ್ಳುತ್ತಿದೆ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ರೈಲ್ವೇ ಯೋಜನೆಗಳು, ಕಳಸವಳ್ಳಿ ಸಿಗಂದೂರು ಸೇತುವೆ, ಶಿವಮೊಗ್ಗ ವರ್ತುಲ ರಸ್ತೆ ಕಾಮಗಾರಿ, ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳು ಸಾಧ್ಯವಾಗಿವೆ ಎಂದು ಹೇಳಿದರು.
ಶಾಸಕರಾದ ಹರತಾಳು ಹಾಲಪ್ಪ, ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಕುಮಾರ ಬಂಗಾರಪ್ಪ, ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಆಯನೂರು ಮಂಜುನಾಥ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ಮತ್ತಿತರ ಗಣ್ಯರು ಶುಭ ಹಾರೈಸಿದರು. ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ರೇವಣಪ್ಪ ಮತ್ತಿತರರು ಉಪಸ್ಥಿತರಿದ್ದು ಶುಭ ಹಾರೈಸಿದರು..
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200