ಶಿವಮೊಗ್ಗದ ಕಾಲೇಜುಗಳ ಆಡಳಿತ ಮಂಡಳಿ ಜೊತೆ ಪೊಲೀಸರ ಮಹತ್ವದ ಸಭೆ, ಕಟ್ಟುನಿಟ್ಟು ಸೂಚನೆ, ಏನದು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿವಮೊಗ್ಗ: ಶಾಲಾ-ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿ ಶಿಕ್ಷಣ ಸಂಸ್ಥೆಯು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು ಎಂದು ಶಿವಮೊಗ್ಗ ಬಿ ಉಪವಿಭಾಗದ ಡಿವೈಎಸ್‌ಪಿ ಸಂಜೀವ್ ಕುಮಾರ್ ಸೂಚನೆ ನೀಡಿದರು.

➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಗರದ ಸಂಚಾರ ವೃತ್ತ ಕಚೇರಿಯಲ್ಲಿ ಇಂದು ಆಯೋಜಿಸಲಾಗಿದ್ದ ಪಿಯು ಕಾಲೇಜುಗಳ ಆಡಳಿತ ಮಂಡಳಿ ಮುಖ್ಯಸ್ಥರು ಮತ್ತು ಪ್ರಾಂಶುಪಾಲರ ಸಭೆಯಲ್ಲಿ ಅವರು ಮಾತನಾಡಿದರು.

DYSP-Sanjeev-Kumar-Held-meeting-with-pu-college-admins-and-principals.

‘ವಿದ್ಯಾರ್ಥಿಗಳನ್ನು ಕರೆತರುವ ಶಾಲಾ-ಕಾಲೇಜು ವಾಹನಗಳ ಎಲ್ಲಾ ದಾಖಲೆಗಳು ಚಾಲ್ತಿಯಲ್ಲಿರಬೇಕು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಾಹನದಲ್ಲೂ ಜಿಪಿಎಸ್ ವ್ಯವಸ್ಥೆ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು ಕಡ್ಡಾಯ. ಇದರೊಂದಿಗೆ ಕಾಲೇಜಿನ ಪ್ರವೇಶ ದ್ವಾರಗಳಲ್ಲೂ ಸಿಸಿಟಿವಿ ಕಣ್ಗಾವಲು ಇರಬೇಕು’ ಎಂದು ಅವರು ತಿಳಿಸಿದರು.

ಅಪ್ರಾಪ್ತರ ವಾಹನ ಚಾಲನೆಗೆ ಬ್ರೇಕ್

‘ಇತ್ತೀಚಿಗೆ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ದ್ವಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳನ್ನು ಚಲಾಯಿಸಿಕೊಂಡು ಕಾಲೇಜುಗಳಿಗೆ ಬರುತ್ತಿರುವುದು ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕಾಲೇಜುಗಳು ಪೋಷಕರ ಸಭೆಗಳನ್ನು ನಡೆಸಿ, ಮಕ್ಕಳಿಗೆ ವಾಹನ ನೀಡದಂತೆ ಕಟ್ಟುನಿಟ್ಟಿನ ಜಾಗೃತಿ ಮೂಡಿಸಬೇಕು.ʼ ಎಂದರು.

‘ಒಂದು ವೇಳೆ ಅಪ್ರಾಪ್ತ ವಿದ್ಯಾರ್ಥಿಗಳು ಕಾಲೇಜು ಆವರಣ ಅಥವಾ ಸಾರ್ವಜನಿಕ ರಸ್ತೆಗಳಲ್ಲಿ ವಾಹನ ಚಾಲನೆ ಮಾಡುವುದು ಕಂಡುಬಂದಲ್ಲಿ, ಸಾರ್ವಜನಿಕರು ಹಾಗೂ ಕಾಲೇಜು ಸಿಬ್ಬಂದಿಯು ಅದರ ಫೋಟೋ ಅಥವಾ ವೀಡಿಯೊಗಳನ್ನು ಪೊಲೀಸ್ ಇಲಾಖೆಯ ಪಬ್ಲಿಕ್ ಐ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಮಾಹಿತಿ ನೀಡಬಹುದು ಎಂದು ಡಿವೈಎಸ್ಪಿ ಸಂಜೀವ್‌ ಕುಮಾರ್‌ ತಿಳಿಸಿದರು.

ಸಭೆಯಲ್ಲಿ ಟ್ರಾಫಿಕ್‌ ಪೊಲೀಸ್ ಇನ್ಸ್‌ಪೆಕ್ಟರ್‌ ದೇವರಾಜ್, ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಸ್ವಪ್ನಾ ಎಲ್. ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.