ಶಿವಮೊಗ್ಗ: ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು (SSLC Exams) ಜಿಲ್ಲೆಯಲ್ಲಿ ಅತ್ಯಂತ ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಎಲ್ಲೆಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?
ಮಾರ್ಚ್ 18 ರಿಂದ ಏಪ್ರಿಲ್ 4 ರವರೆಗೆ ಜಿಲ್ಲೆಯ ಒಟ್ಟು 79 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಶಿವಮೊಗ್ಗ ತಾಲೂಕಿನಲ್ಲಿ 20 ಕೇಂದ್ರಗಳು, ಭದ್ರಾವತಿಯಲ್ಲಿ 15 ಕೇಂದ್ರಗಳು, ಶಿಕಾರಿಪುರದಲ್ಲಿ 11 ಕೇಂದ್ರಗಳು, ಸೊರಬದಲ್ಲಿ 10 ಕೇಂದ್ರಗಳು, ಸಾಗರದಲ್ಲಿ 9 ಕೇಂದ್ರಗಳು, ಹೊಸನಗರ ಮತ್ತು ತೀರ್ಥಹಳ್ಳಿಯಲ್ಲಿ ತಲಾ 7 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಏನೇನೆಲ್ಲ ಕ್ರಮ ಕೈಗೊಳ್ಳಲಾಗಿದೆ?
ಇದನ್ನೂ ಓದಿ – ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಸಚಿನ್ ಅಂತ್ಯಕ್ರಿಯೆ
ವೆಬ್ಕಾಸ್ಟಿಂಗ್: ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ವೆಬ್ಕಾಸ್ಟಿಂಗ್ ಮೂಲಕ ನಿಗಾ ವಹಿಸಲಾಗುವುದು. ಇಂಟರ್ನೆಟ್ ಮತ್ತು ಯುಪಿಎಸ್ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ನಿಷೇಧಾಜ್ಞೆ: ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಸಮೀಪದ ಸೈಬರ್ ಕೆಫೆ ಮತ್ತು ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಜಾಗೃತ ದಳ: 31 ಮಾರ್ಗಗಳಿಗೆ ಮಾರ್ಗಾಧಿಕಾರಿಗಳು ಹಾಗೂ 79 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಸೌಲಭ್ಯಗಳು: ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಆಸನ ವ್ಯವಸ್ಥೆ ಹಾಗೂ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಮೆಸ್ಕಾಂ ವತಿಯಿಂದ ನಿರಂತರ ವಿದ್ಯುತ್ ಸಂಪರ್ಕ ನೀಡಲಾಗುವುದು.
ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್ ಎನ್, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಇದ್ದರು.


About The Editor
ನಿತಿನ್ ಆರ್.ಕೈದೊಟ್ಲು






