SHIMOGA : ಲೋಕಸಭೆ ಚುನಾವಣೆಗೆ ಶಿವಮೊಗ್ಗದಲ್ಲಿ ಅಧಿಸೂಚನೆ ಹೊರಡಿಸಿದಾಗಿನಿಂದ ಏ.22ರವರೆಗೆ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ.
ಏ.12ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.19ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಹಾಗಾಗಿ ಏ.12ರ ಬೆಳಗ್ಗೆ 6 ರಿಂದ ಏ.22 ರ ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದ 100 ಮೀ. ವ್ಯಾಪ್ತಿಯ ಸುತ್ತಮುತ್ತ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಕಚೇರಿ ಆವರಣಕ್ಕೆ ಮೂರು ವಾಹನ
ನಿಷೇದಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳ ವಾಹನ ಸೇರಿ 3 ವಾಹನಗಳಿಗೆ ಮಾತ್ರ ಕಚೇರಿ ಆವರಣದಲ್ಲಿ ನಿಲುಗಡೆಗೆ ಅನುಮತಿ ನೀಡಲಾಗಿದೆ. ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿಗಳ ಕಚೇರಿ ಪ್ರವೇಶಕ್ಕೆ ಅಭ್ಯರ್ಥಿ ಸೇರಿ 5 ಜನರಿಗೆ ಮಾತ್ರ ಅನುಮತಿ ಇದೆ. 5 ಮಂದಿಗಿಂತ ಹೆಚ್ಚು ಮಂದಿ ಗುಂಪು ಸೇರುವುದು, ಆಯುಧ, ಶಸ್ತ್ರಾಸ್ತ್ರ ಮತ್ತು ಮಾರಾಕಾಸ್ತ್ರಗಳನ್ನು ಹಿಡಿದು ತಿರುಗುವುದನ್ನು ನಿರ್ಭಂದಿಸಿದೆ. ಚುನಾವಣಾ ಕಾರ್ಯದಲ್ಲಿ ನಿರತವಾಗಿರುವ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ, ಅಭ್ಯರ್ಥಿಗಳು, ಅನುಮತಿ ಹೊಂದಿದ ರಕ್ಷಣಾ ಇಲಾಖೆ ಸಿಬ್ಬಂದಿ, ಅನುಮತಿ ಪಡೆದ ಮಾಧ್ಯಮ ಸಿಬ್ಬಂದಿ ಹೊರತು ಸಾರ್ವಜನಿಕರ ಪ್ರವೇಶ ನಿಷೇಧಿಸಿದೆ.
ಘೋಷಣೆ, ಪಟಾಕಿ, ಮೆರವಣಿಗೆ ಇಲ್ಲ
ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ನಡೆಸುವುದು ಹಾಗೂ ಶಾಂತಿ ಶಿಸ್ತು ಪಾಲನೆಗೆ ಭಂಗ ತರುವ ರೀತಿಯಲ್ಲಿ ವರ್ತಿಸುವಂತಿಲ್ಲ. ಯಾವುದೇ ರೀತಿಯ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡವಂತಿಲ್ಲ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುವಂತಿಲ್ಲ.
ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರ ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ. ಈ ಆದೇಶವು ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ನಗರದ ಹಲವು ಕಡೆ ಇಡೀ ದಿನ ಕರೆಂಟ್ ಇರಲ್ಲ